ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಖಂಡನೀಯ: ಸೂಕ್ತಕ್ರಮಕ್ಕೆ ಮಾಜಿ ಸಿಎಂ ಹೆಚ್,ಡಿಕೆ ಆಗ್ರಹ. ತುಮಕೂರು,ಡಿಸೆಂಬರ್,1,2022(..):ಬೆಳಗಾವಿ ಕಾಲೇಜೊಂದರಲ್ಲಿ ಡ್ಯಾನ್ಸ್ ಮಾಡುವ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಕಿಡಿಗೇಡಿ ಸಹಪಾಠಿಗಳು ನಡೆಸಿದ ಹಲ್ಲೆಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಅಲ್ಲದೇ ದೂರು ನೀಡಲು ಹೋದ ವಿದ್ಯಾರ್ಥಿ ಮೇಲೆಯೇ ಪೊಲೀಸರು ಧರ್ಪ ಮೆರೆದಿರುವುದಕ್ಕೂ ಹೆಚ್.ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ. ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಹೆಚ್.ಡಿಕೆ ಖಂಡಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಹೆಚ್,ಡಿಕೆ ವಾಗ್ದಾಳಿ ನಡೆಸಿದ್ದಾರೆ. : – – - - … : , 1, 2022 (..): .. . , .. , “ . “ . ,” . , , , .: .. / / /