ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಹೆಚ್.ಡಿ ದೇವೇಗೌಡರಿಗೆ ಆಹ್ವಾನ ನೀಡದ ಹಿನ್ನೆಲೆ- ಜೆಡಿಎಸ್ ವಾಗ್ದಾಳಿ. ಬೆಂಗಳೂರು, ನವೆಂಬರ್,11,2022(..):ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಆಹ್ವಾನ ನೀಡದ ಹಿನ್ನೆಲೆ ಬಿಜೆಪಿ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಜೆಡಿಎಸ್ ಘಟಕ, ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಗೌಡರನ್ನು ಆಹ್ವಾನ ಮಾಡಲಿಲ್ಲ ಏಕೆ ಎಂದು ಪ್ರಶ್ನಿಸಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ. ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ ಎಂದು ಜೆಡಿಎಸ್ ಟೀಕಿಸಿದೆ. ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ಜೆಡಿರಸ್ ಗುಡುಗಿದೆ. : – - – -