ನ. 23 ರಂದು ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ಟ್ರೈನ್‌ ನ ಎರಡನೇ ಟ್ರಿಪ್‌- ಸಚಿವೆ ಶಶಿಕಲಾ ಜೊಲ್ಲೆ. ಬೆಂಗಳೂರು ನವೆಂಬರ್‌,3,2022(..):ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲ್ವೇ ಪ್ಯಾಕೇಜ್‌ ನ ಎರಡನೇ ಟ್ರಿಪ್‌ ಗೆ ನವೆಂಬರ್‌ 23 ಕ್ಕೆ ಸಿದ್ದತೆ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು. ಇಂದು ಬೆಂಗಳೂರು ನಗರದ ಸರ್‌ ಎಂ ವಿಶ್ವೇಶ್ವರಯ್ಯ ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಕಾಶಿ ದರ್ಶನಕ್ಕೆ ಸಿದ್ದಪಡಿಸಲಾಗುತ್ತಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ಯೋಜನೆಯ ಅಡಿಯಲ್ಲಿ ಸಿದ್ದವಾಗುತ್ತಿರುವ ರೈಲಿನ ಸಿದ್ದತೆಗಳನ್ನು ಪರಿಶೀಲಿಸಿ, ರೈಲ್ವೇ ಅಧಿಕಾರಿಗಳು, ಐಆರ್‌ಸಿಟಿಸಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ರಾಜ್ಯದ ಜನರನ್ನ ಕಾಶಿ ದರ್ಶನಕ್ಕೆ ಕಳುಹಿಸಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ನಿಂತಿದ್ದು ಮುಖ್ಯಮಂತ್ರಿಗಳು. ಮೊದಲ ಟ್ರಿಪ್‌ ನವೆಂಬರ್‌ 11 ರಂದು ಹೊರಡಲಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಹೇಳಿದರು. ಮೊದಲ ಟ್ರಿಪ್‌ ನ ಟಿಕೆಟ್‌ ಗಳು ಕೇವಲ 3 ದಿನದಲ್ಲಿಯೇ ಸಂಪೂರ್ಣ ಬುಕ್ಕಿಂಗ್‌ ಆಗಿದೆ. ಎರಡನೇ ಟ್ರಿಪ್‌ಗೂ ಈಗಾಗಲೇ 100 ಕ್ಕೂ ಹೆಚ್ಚು ಬುಕ್ಕಿಂಗ್‌ ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ನವೆಂಬರ್‌ 23, 2022 ರಂದು ಎರಡನೇ ಟ್ರಿಪ್‌ ಗೆ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಭಾರತ್‌ ಗೌರ್‌ ರೈಲನ್ನ ಪ್ರಾರಂಭಿಸುತ್ತಿರುವ ಹೆಗ್ಗಳಿಕೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 3 ಟಯರ್‌ ಎಸಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್‌ ಮಾಡಲಾಗಿದೆ. ನಮ್ಮ ರಾಜ್ಯದ ದೇವಸ್ಥಾನಗಳನ್ನು ಭಾರತದ ಉದ್ದಗಲಕ್ಕೂ ಸಂಚರಿಸಲಿರುವ ಟ್ರೈನ್‌ ಮೂಲಕ ಪ್ರಚಾರ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್‌ 11 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮಗಳ ಜೊತೆಯಲ್ಲಿಯೇ ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲಿಗೂ ಚಾಲನೆ ನೀಡಲಿ ಎನ್ನುವುದು ನಮ್ಮ ಆಶಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದು ಸದ್ಯದಲ್ಲೇ ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದರು. ಐಆರ್‌ಸಿಟಿಸಿ ಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಊಟ, ಉಪಹಾರ, ಯಾತ್ರಾ ಸ್ಥಳದಲ್ಲಿ ತಂಗುವ ವ್ಯವಸ್ಥೆ ಹಾಗೂ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು. ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಐಆರ್‌ಸಿಟಿಸಿ ಹಾಗೂ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. : – - - - –- -- .