ಸಮಸ್ಯೆ ಹೇಳಲು ಬಂದ ಮಹಿಳೆಗೆ ನಿಂದನೆ ಆರೋಪ: ಶಾಸಕ ಅರವಿಂದ ಲಿಂಬಾವಳಿ ಸ್ಪಷ್ಟನೆ. ಬೆಂಗಳೂರು,ಸೆಪ್ಟಂಬರ್,3,2022(..):ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ ಲಿಂಬಾವಳಿಗೆ ಮಹಿಳೆಯೊಬ್ಬರು ಸಮಸ್ಯೆ ಬಗ್ಗೆ ಮನವಿ ಪತ್ರ ನೀಡಲು ಬಂದಿದ್ದರು. ಈ ವೇಳೆ ಶಾಸಕ ಅರವಿಂದ ಲಿಂಬಾವಳಿ ನಿಂದಿಸಿ ಅವಾಜ್ ಹಾಕಿರುವ ಆರೋಪ ಕೇಳಿ ಬಂದಿದೆ. ಶಾಸಕರಿಗೆ ಮನವಿ ಪತ್ರ ಕೊಡಲು ಬಂದಿದ್ದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ, ಮಹಿಳೆಯ ಮನವಿ ಪತ್ರ ಕಸಿದುಕೊಂಡು ನಿನಗೆ ಮಾನ ಮಾರ್ಯಾದೆ ಇದೆಯಾ? ನಾಚಿಕೆ ಆಗಲ್ವಾ? ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಮಹಿಳೆ, ಸಮಸ್ಯೆ ಬಗ್ಗೆ ಹೇಳಲು ಹೋದಾಗ ನಿಂದನೆ ಮಾಡಿ, ಹಲ್ಲೆಗೆ ಯತ್ನಿಸಿದ್ದಾರೆ. ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಘಟನೆ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಅರವಿಂದ ಲಿಂಬಾವಳಿ, ಸರ್ಕಾರಿ ಜಾಗ ಅತಿಕ್ರಮಿಸಿ ಅಲ್ಲಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ದೂರು ನೀಡಿದ ಮಹಿಳೆ ಕಾಂಗ್ರೆಸ್ ಕಾರ್ಯಕರ್ತೆ. ಕಾಂಗ್ರೆಸ್ ಕಾರ್ಯಕರ್ತರು ನನ್ನ ವಿರುದ್ದ ಧರಣಿ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದವರು ಅಕ್ರಮಕ್ಕೆ ಬೆಂಬಲಿಸುತ್ತಿದ್ದಾರೆ. ದರ್ಪ ಹಲ್ಲೆ ಸೇರಿದಂತೆ ಏನ್ ಬೇಕಾದರೂ ಪದ ಬಳಸಿಕೊಳ್ಳಲಿ. ಆದರೆ ಅಕ್ರಮವಾಗಿ ರಾಜಕಾಲುವೆ ಮೇಲೆ ಮನೆ ಕಟ್ಟಿಕೊಂಡಿದ್ದಾರೆ. ಅಕ್ರಮ ಕಟ್ಟಡವನ್ನ ಮೊದಲು ತೆರವು ಮಾಡಲಿ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ. : - – –--