ಹುಣಸೂರು ತಾಲೂಕು ಕಚೇರಿ ದುರಸ್ತಿಗೆ ಹಣ ಬಿಡುಗಡೆ: ಸಚಿವ ಎಸ್.ಟಿ.ಸೋಮಶೇಖರ್ ಹುಣಸೂರು,ಆಗಸ್ಟ್07, 2022 (..): ಹುಣಸೂರು ತಾಲೂಕು ಕಚೇರಿ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ತಾಲೂಕು ಕಚೇರಿಗೆ ಭೇಟಿ ನೀಡಿದ ಸಚಿವರು ಹಾನಿಗೊಳಗಾಗಿರುವ ಕಟ್ಟಡದ ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಸಚಿವರು, ಪಿಡಬ್ಲ್ಯೂಡಿ, ತಾಲೂಕು ಅಧಿಕಾರಿಗಳೊಂದಿಗೆ ಕಟ್ಟಡದ ವೀಕ್ಷಣೆ ಮಾಡಲಾಗಿದೆ. ದುರಸ್ತಿ ಕಾರ್ಯ ಕೈಗೊಳ್ಳಲು ಹಣ ಬಿಡುಗಡೆ ಮಾಡುವಂತೆ ಕೇಳಲಾಗಿದೆ ಎಂದರು. ನೂತನ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಅಂದಾಜು ವೆಚ್ಚದ ಪಟ್ಟಿ ಸಿದ್ಧಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಗಮನಕ್ಕೆ ತಂದು ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.