ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ.. ಬೆಂಗಳೂರು,ಆಗಸ್ಟ್,8,2022(..):ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ( ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ ಎಂದು ತಿಳಿಸಿದ್ದಾರೆ. ಹಾಗೆಯೇ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಶಾಲಾ ಶಿಕ್ಷಣ‌ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು ಎಂದು ತಿಳಿಸಿದ್ದಾರೆ. : – –- - – .