ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವವರೆಗೂ ನಾನೂ ಹೋರಾಟದಲ್ಲಿ ಭಾಗಿಯಾಗುವೆ- ಶಾಸಕ ಜಮೀರ್ ಅಹ್ಮದ್ ಖಾನ್. ಬೆಂಗಳೂರು,ಜುಲೈ,2,2022(..):ಬಿಬಿಎಂಪಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ನಾನು ಅವರೊಂದಿಗೆ ಹೋರಾಟ ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಸೇವೆ ಖಾಯಂ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ನಗರದ ಸ್ವಾಸ್ಥ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಎರಡು ದಿನಗಳೊಳಗಾಗಿ ಈಡೇರಿಸಬೇಕು. ಇಲ್ಲವಾದರೆ, ಸೋಮವಾರದಿಂದ ನಾನೂ ಪ್ರತಿಭಟನೆಯಲ್ಲಿ ಭಾಗವಹಿಸಿ, ಬೇಡಿಕೆಗಳು ಈಡೇರುವವರೆಗೂ ಇಲ್ಲೇ ಊಟ, ತಿಂಡಿ ಮಾಡುತ್ತೇನೆ. ಇಲ್ಲೇ ಮಲಗುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಪೌರ ಕಾರ್ಮಿಕರು ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಪೌರ ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ಇದೆ. ನಿಮ್ಮ ಕಷ್ಟ, ನೋವುಗಳು ನಮ್ಮ ಕಷ್ಟ, ನೋವುಗಳಿದ್ದಂತೆ. ಇಂದು ಸಂಜೆ 4 ಗಂಟೆಗೆ ಅವರು ಇಲ್ಲಿಗೆ ಬಂದು ನಿಮ್ಮ ಕೂಗಿಗೆ ಸಾಥ್ ನೀಡಲಿದ್ದಾರೆ. ನಿಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಜಮೀರ್ ಅಹ್ಮದ್ ಖಾನ್ ಮಾತನಾಡಿದರು. : --- , . . . .