ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಇಂದಿರಾ ಕ್ಯಾಂಟಿನ್ ಗಳಿಗೆ ಬೀಗ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಹುಬ್ಬಳ್ಳಿ,ಜುಲೈ,19,2024 (..):ಗ್ಯಾರಂಟಿ ಯೋಜನೆಗಳನ್ನ ನಿಭಾಯಿಸಲಾಗದೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟಿನ್ ಗಳಿಗೆ ಬೀಗ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿದ್ದ ಹಣಕ್ಕೂ ಕೈ ಹಾಕಿರುವ ಕಾಂಗ್ರೆಸ್ ಸರ್ಕಾರ, ಇದೀಗ ಇಂದಿರಾ ಕ್ಯಾಂಟಿನ್ ಗಳಿಗೆ ಬೀಗ ಹಾಕುತ್ತಿದೆ. ಇಂದಿರಾ ಕ್ಯಾಂಟಿನ್ ಗಳಿಗೆ ಕಳೆದೊಂದು ವರ್ಷದಿಂದ ಆಹಾರ ಪೂರೈಸುತ್ತಿದ್ದ ಗುತ್ತಿಗೆದಾರರಿಗೆ ಬರೋಬ್ಬರಿ 47 ಕೋಟಿ ರೂ. ಬಿಲ್ ಪಾವತಿಸಲಾಗದೆ ಬಾಗಿಲು ಮುಚ್ಚುತ್ತಿದ್ದಾರೆ ಎಂದು ಆರೋಪಿಸಿದರು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಚ್ಚಿಸಲು ಹೊರಟಿತ್ತು ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರವೇ ಇಂದಿರಾ ಕ್ಯಾಂಟಿನ್ ಮುಚ್ಚಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ಬಡವರ ಪರ ಎನ್ನುತ್ತ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ. ನಿಜವಾಗಿ ಸರ್ಕಾರಕ್ಕೆ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಗುಡುಗಿದರು. : , , ,