ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ. ಬೆಂಗಳೂರು,ಮೇ,17,2022(..):ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್ ​ನಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದು, ಕೇಂದ್ರ, ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸಲಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಇಂದು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ. ಈಗಾಗಲೇ ಆಶಾ ಕಾರ್ಯಕರ್ತೆಯರು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದೇವೆ ಆದರೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರು, ಕೇಂದ್ರ ಸರ್ಕಾರ 3 ಸಾವಿರ, ರಾಜ್ಯ ಸರ್ಕಾರ 5 ಸಾವಿರ ಎನ್ನುತ್ತಿದೆ. ಕೇಂದ್ರ ಸರ್ಕಾರದಿಂದ ಕೇವಲ 650 ರೂ. ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಾಹ ಧನ, ಗೌರವಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ನಷ್ಟ ತುಂಬಿಕೊಡಬೇಕು. ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಆಶಾಕಾರ್ಯಕರ್ತೆಯರು ಪಾಲ್ಗೊಳ್ಳುವ ಸಾಧ್ಯತೆ ಇದೆ. : - --