ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂ ಕುಸಿತ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು ದಕ್ಷಿಣ ಕನ್ನಡ, ಜುಲೈ,3,2024 (..):ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಿಹಾರ ಮೂಲದವರಾದ ಚಂದನ್ ಮತ್ತು ರಾಜಕುಮಾರ್ ಎಂಬುವವರು ಮಣ್ಣಿನಡಿ ಸಿಲುಕಿದ್ದು ಓರ್ವ ಕಾರ್ಮಿಕನನ್ನ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಧ್ಯೆ ಮತ್ತೋರ್ವ ಕಾರ್ಮಿಕ ಕಳೆದ ಎರಡು ಗಂಟೆಗಳಿಂದ ಮಣ್ಣಿನಡಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಲುಕಿದ್ದು ಭಾರಿ ಮಳೆ ನಡುವೆ ರಕ್ಷಣಾ ಕಾರ್ಯ ಮುಂದುವರೆದಿದೆ. ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ‌ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್‌ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದರು. ಇನ್ನು ಘಟನಾ ಸ್ಥಳದ ಬಳಿ ಇತರ ಕಾರ್ಮಿಕರ ಅಳಲು ಮುಗಿಲುಮುಟ್ಟಿದೆ. : , , ,