ಶಾಸಕರಿಗೆ ಆಮಿಷ ಪ್ರಕರಣ: ಸಚಿವ ಅಶ್ವಥ್ ನಾರಾಯಣ್ ಸೇರಿ ನಾಲ್ವರಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್. ಬೆಂಗಳೂರು,ಜನವರಿ,4,2022(..):ಸರ್ಕಾರ ರಚನೆಗೆ ಬಿಜೆಪಿ ಬೆಂಬಲಿಸಲು ಶಾಸಕರಿಗೆ ಆಮಿಷವೊಡ್ಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವಥ್ ನಾರಾಯಣ್ ಸೇರಿ ನಾಲ್ವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪಕ್ಷಾಂತರ ನಾಯಕರಿಗೆ ಬಿಜೆಪಿ ನಾಯಕರಿಂದ ಆಮಿಷ ಆರೋಪ ಪ್ರಕರಣದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸೇರಿ ನಾಲ್ವರು ಬಿಜೆಪಿ ಮುಖಂಡರ ವಿರುದ್ಧ ಜಾರಿಯಾಗಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಸಂಬಂಧ ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಶೇಷ ಕೋರ್ಟ್ ನಿಂದ ಸಚಿವ ಅಶ್ವತ್ಥನಾರಾಯಣ್ ಹಾಗೂ ಬಿಜೆಪಿ ಮುಖಂಡರಾದ ಎಸ್ ಆರ್ ವಿಶ್ವನಾಥ್, ಸಿಪಿ ಯೋಗೇಶ್ವರ್, ಶ್ರೀನಿವಾಸ ಗೌಡ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನ ರದ್ದುಗೊಳಿಸಿದೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ನಡೆಯುತ್ತಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ನಡೆಸಿತ್ತು ಎನ್ನಲಾದ ಪ್ರಯತ್ನಗಳ ಬಗ್ಗೆ ಹಲವು ಊಹಾಪೋಹಗಳು ಎದ್ದಿದ್ದವು. ಬಿಜೆಪಿ ಬೆಂಬಲಿಸಲು ಶಾಸಕರಿಗೆ ಆಮಿಷವೊಡ್ಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಸಚಿವರು ಮತ್ತು ಶಾಸಕರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಪಕ್ಷಾಂತರ ನಾಯಕರಿಗೆ ಬಿಜೆಪಿ ನಾಯಕರು ಬಿಜೆಪಿ ಬೆಂಬಲಿಸುವಂತೆ ಆಮಿಷ ಒಡ್ಡಿದ್ದಾರೆ ಎಂಬುದಾಗಿ ಟಿ.ಜೆ.ಆಬ್ರಾಹಂ ಎಂಬುವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ಸಚಿವ ಅಶ್ವತ್ಥನಾರಾಯಣ್ ಸೇರಿದಂತೆ ನಾಲ್ವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಈಗ ಹೈಕೋರ್ಟ್ ಸಮನ್ಸ್ ರದ್ದುಗೊಳಿಸಿದೆ. : - – - – .