ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ- ಸಿದ್ಧರಾಮಯ್ಯ ವಿರುದ್ದ ಸಿಎಂ ಬೊಮ್ಮಾಯಿ ವಾಗ್ದಾಳಿ. ಹಾವೇರಿ, ಅಕ್ಟೋಬರ್ 22,2021(..):ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಳ್ಳುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಾನಗಲ್ ಉಪಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,”ಅನ್ನಭಾಗ್ಯ ಯೋಜನೆ ಜಾರಿ ಮಾಡಿದ ನಂತರವೇ ಜನ ಅಕ್ಕಿ ನೋಡಿದ್ದಾರೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಅಕ್ಕಿಯಲ್ಲಿ‌ ಕೇಂದ್ರದ ಪಾಲು ಹೆಚ್ಚು. ರಾಜ್ಯ ಸರ್ಕಾರದ ಪಾಲು ಪ್ರತಿ ಕೆಜಿಗೆ ಕೇವಲ 3 ರೂಪಾಯಿ. ಆದರೆ ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ ಎಂದರು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ಪ್ರತಿ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು. ಹಾಗೆಯೇ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿರಲಿಲ್ಲ, ರೈತರನ್ನು ಉದ್ಧಾರ ಮಾಡುವ ಮನಸ್ಥಿತಿ ಅವರಿಗಿಲ್ಲ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುವುದೇ ಕಾಂಗ್ರೆಸ್ ಕೆಲಸ ಎಂದು ಸಿಎಂ ಬೊಮ್ಮಾಯಿ ಟೀಕಿಸಿದರು. : – --- - -.