ಸೆ.13ರಿಂದ 24ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ. ಬೆಂಗಳೂರು,ಆಗಸ್ಟ್,19,2021(..):ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಾಧುಸ್ವಾಮಿ, ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ 10 ದಿನಗಳ ಕಾಲ ವಿಧಾನಸೌಧದಲ್ಲೇ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಇನ್ನು ಸಭೆಯಲ್ಲಿ ನೀರಾವರಿ ಯೋಜನೆಗಳನ್ನು ತ್ವರಿತಗೊಳಿಸುವ ಬಗ್ಗೆ ವಿಶೇಷ ಒತ್ತು ನೀಡಲಾಯಿತು. ರಾಜ್ಯದಲ್ಲಿ ಸದ್ಯ ಕೋವಿಡ್-19 ನಿಯಂತ್ರಣದಲ್ಲಿರುವುದರಿಂದ ಮೂರನೇ ಅಲೆ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆ ಕೂಡ ಯಾವುದೇ ಚರ್ಚೆ ಮಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಈ ಬಾರಿ ಬೆಳಗಾವಿ ಸುವರ್ಣಸೌಧಧಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವಂತೆ ಆಗ್ರಹ ಕೇಳಿಬಂದಿತ್ತು. ಆದರೆ ಈ ಬಾರಿಯೂ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. : –- – 13 24