ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನ- ಮಾಜಿ ಸಿಎಂ ಸಿದ್ಧರಾಮಯ್ಯ. ಹುಬ್ಬಳ್ಳಿ,ಜುಲೈ,12,2021(..):ಕೆಆರ್ ಎಸ್ ಬಿರುಕು ಬಿಟ್ಟಿದೆ. ಕೆಆರ್ ಎಸ್ ಸುತ್ತಾ ಮುತ್ತಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸಂಸದೆ ಸುಮಲತಾ ಆರೋಪಿಸಿದ್ದಾರೆ. ಈ ಮಧ್ಯೆ ಸರ್ಕಾರ, ಗಣಿ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕಿತ್ತು. ಆದರೆ, ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನ ಉಂಟಾಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಮಂಡ್ಯ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಅವರ ಪುತ್ರನನ್ನು ಸೋಲಿಸಿದ್ದಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಕೆಆರ್‍ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಕೆಆರ್‍ಎಸ್ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪ ಮಾಡಿದ್ದಾರೆ. ಆದರೆ ಅಕ್ರಮ ಗಣಿಗಾರಿಕೆ ಬಗ್ಗೆ ಕ್ರಮಕ್ಕೆ ಸರ್ಕಾರ ಮುಂದಾಗಿಲ್ಲ ಎಂದರು. ಹಾಗೆಯೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ಧರಾಮಯ್ಯ, ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಕೊರೋನಾ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ವೇಳೆ ವಿಪಕ್ಷಗಳು ಸಹ ವಿರೋಧ ಮಾಡುವುದು ಪ್ರತಿಭಟನೆ ಮಾಡಲು ಆಗಲ್ಲ. ಅದ್ಧರಿಂದ ಈಗ ಸರ್ಕಾರಕ್ಕೆ ಆಡಿದ್ಧೆ ಆಟವಾಗಿದೆ ಎಂದು ಟೀಕಿಸಿದರು. ಬಾದಾಮಿಯಲ್ಲಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ನನಗೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಆಹ್ವಾನ ಬಂದಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಬಾದಾಮಿಯಲ್ಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. : - - – - -