ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸಿ- ಡಿಸಿಎಂ ಅಶ್ವಥ್ ನಾರಾಯಣ್ ಗೆ ಸಚಿವ ಸುರೇಶ್ ಕುಮಾರ್ ಮನವಿ. ಬೆಂಗಳೂರು,ಜೂನ್,5,2021(..):ಈ‌ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯು ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ‌ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕಿಂಗ್ ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ‌ ಸಚಿವ ಡಾ.ಅಶ್ವತ್ಥ ನಾರಾಯಣ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ ಸಂಬಂಧ ಡಿಸಿಎಂ ಅಶ್ವಥ್ ನಾರಾಯಣ್ ಗೆ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ಮಾನ್ಯ ಉಪಮುಖ್ಯಮಂತ್ರಿಗಳೇ, ದಿನಾಂಕ 04.06.2021ರಂದು ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ತೀರ್ಮಾನವನ್ನು ನಾವು ತೆಗೆದುಕೊಂಡಿದ್ದೇವೆ. ಕೋವಿಡ್ ಪ್ರಸರಣದ ತೀವ್ರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರವು ಅವಶ್ಯಕವಾಗಿತ್ತು. ಅದನ್ನು ತಮ್ಮೊಂದಿಗೂ ನಾನು ಹಂಚಿಕೊಂಡಿದ್ದೇನೆ.‌ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ತೇರ್ಗಡೆ‌ ಮಾಡುವ ನಿರ್ಧಾರದ ಹಿಂದೆ ನಾವು ನಿರ್ದಿಷ್ಟವಾದ ತರ್ಕವನ್ನು ಅನುಸರಿಸಿದ್ದೇವೆ. ಈ ವಿದ್ಯಾರ್ಥಿಗಳ ಮೊದಲ‌ ಪಿಯು ಅಂಕಗಳಲ್ಲದೇ ಎಸ್.ಎಸ್.ಎಲ್.ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ. ಅಲ್ಲದೇ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ ಕ್ಲಪ್ತ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆಯೆಂದೂ ಘೋಷಿಸಿದ್ದೇವೆ. ಇಂದಿನ ಸಂದರ್ಭದಲ್ಲಿ ಇದಕ್ಕಿಂತ ಪ್ರಸ್ತುತವಾದ ನಿರ್ಧಾರವನ್ನು ತೆಗೆದುಕೊಳ್ಳುವುದು‌ ಕಷ್ಟ ಸಾಧ್ಯವಾಗಿರುತ್ತದೆ. ಸಾಮಾನ್ಯವಾಗಿ ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತ‌ಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ. ಹಾಗಾಗಿ, ಈ ಬಾರಿಯ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶವನ್ನು ಸಿ.ಇ.ಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ. ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಬಾರಿಗೆ ಸೀಮಿತಗೊಂಡಂತೆ ತಮ್ಮ ಇಲಾಖೆಯು ನಡೆಸಲು‌ ಉದ್ದೇಶಿಸಿರುವ ವೃತ್ತಿಪರ ಕೋರ್ಸ್ ದಾಖಲಾತಿಗೆ ಸಂಬಂಧಿಸಿದ ಸಿ.ಇ.ಟಿ.ಪರೀಕ್ಷೆಗೆ ವೇಟೇಜ್ ನೀಡುವ ಪ್ರಕ್ರಿಯೆಯನ್ನು ತಾವು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕಿಂಗ್ ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ. ಈ ಕುರಿತಂತೆ ನಾನು ತಮ್ಮೊಂದಿಗೆ ಖುದ್ದಾಗಿ ಮಾತನಾಡಿರುವ ಅಂಶವನ್ನು ಸಹ ಇಲ್ಲಿ ಸ್ಮರಿಸುತ್ತಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ. : - - – - -- –