ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಬಗ್ಗೆ ನಾಲ್ಕೈದು ದಿನಗಳಲ್ಲಿ ಅಂತಿಮ ತೀರ್ಮಾನ… ಬೆಂಗಳೂರು ಮೇ 19,2021(..):ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಪರಿಷ್ಕರಣೆ ಕುರಿತಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ್‌ ಉಪಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಎರಡನೇ ಸಭೆಯನ್ನು ನಡೆಸಲಾಯಿತು. ಸಮ್ಮತಿ ಶುಲ್ಕ ಪರಿಷ್ಕರಿಸುವಂತೆ ಕೈಗಾರಿಕಾ ಪ್ರತಿನಿಧಿಗಳು ಮನವಿ ಮಾಡಿಕೊಂಡ ಹಿನ್ನೆಲೆ ಇಂದು ಎರಡನೇ ಸಭೆಯನ್ನು ನಡೆಸಲಾಯಿತು. ಕೈಗಾರಿಕಾ ಇಲಾಖೆಯ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಅಂತಿಮವಾದ ತೀರ್ಮಾನಕ್ಕೆ ಬರಲು ಅಧಿಕಾರಿಗಳಿಗೆ ಸೂಚಿಸಲಾಯಿತು. ನಾಲ್ಕೈದು ದಿನಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರುಗಳು ಕೈಗಾರಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್‌ ಖತ್ರಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಂದೀಪ್‌ ದವೆ, ಕೈಗಾರಿಕಾಭಿವೃದ್ದಿ ಆಯುಕ್ತರು ಹಾಗೂ ನಿರ್ದೇಶಕರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಶ್ರೀಮತಿ ಗುಂಜನ್‌ ಕೃಷ್ಣ, ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ ಶಿವಶಂಕರ್‌, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು. : – - – -