ಲಾಕ್ ಡೌನ್: ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ… ಬೆಂಗಳೂರು, ಮೇ 10,2021(..):ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಾಗಿ ಇಂದಿನಿಂದ 14 ದಿನಗಳ ಕಾಲ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ , ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅನಗತ್ಯವಾಗಿ ಬಲ ಪ್ರಯೋಗ ಮಾಡದಂತೆ ನಿರ್ದೇಶನ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಒಂದು ವೇಳೆ ಸಾರ್ವಜನಿಕರು ಲಾಕ್‌ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಪೊಲೀಸ್ ಸಿಬ್ಭಂದಿ ಕ್ರಮಕೈಗೊಳ್ಳಬೇಕು ಹೊರತು ಯಾವುದೇ ಬಲ ಪ್ರಯೋಗ ಮಾಡಬಾರದು ಎಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಹಾಗೆಯೇ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಚಾರ ಅವಶ್ಯವಿದ್ದಲ್ಲಿ ಅದರ ಕುರಿತಂತೆ ಮಾಹಿತಿಗಾಗಿ ಕರೆ ಮಾಡಬಹುದು ಎಂದು ನಂಬರ್ ವೊಂದನ್ನು ಹಾಕಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ನಡೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. : - - - -–