ಕೋವಿಡ್ ನಿಯಮ ಪಾಲಿಸಿ, ನೆರವಿಗೆ ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ ಭೂತೆ… ಮೈಸೂರು,ಏಪ್ರಿಲ್.29,2021(..): ಮೈಸೂರು ಜಿಲ್ಲೆಯನ್ನೊಳಗೊಂಡಂತೆ ದೇಶಾದ್ಯಂತ ಕೋವಿಡ್-19ನ 2ನೇ ಅಲೆಯು ತೀವ್ರವಾಗಿದ್ದು, ಅಗತ್ಯ ಸಂದರ್ಭ ಹೊರತುಪಡಿಸಿ ಮನೆಯಿಂದ ಹೊರ ಬರದೆ ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಹಾಗೂ ಕಾನೂನಿನ ನೆರವಿಗಾಗಿ ಕಾನೂನು ಸೇವಾ ಪ್ರಾದಿಕಾರವನ್ನು ಸಂಪರ್ಕಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜ ಭೂತೆ ಅವರು ತಿಳಿಸಿದ್ದಾರೆ. ಈಗಾಗಲೇ ಕೋವಿಡ್-19 ಲಸಿಕಾ ಅಭಿಯಾನವನ್ನು ಸರ್ಕಾರ ಹಮ್ಮಿಕೊಂಡಿದ್ದು, ಇಲ್ಲಿಯವರೆಗೆ 45 ವರ್ಷಗಳು ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸರ್ಕಾರದ ನಿರ್ದೇಶನದಂತೆ ಎಲ್ಲರೂ ಈ ಪ್ರಯೋಜನ ಪಡೆದುಕೊಂಡು, ವೈಯಕ್ತಿಕ ಮತ್ತು ಸಮುದಾಯ ಆರೋಗ್ಯ ಕಾಪಾಡಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ. ಲಸಿಕಾ ನೊಂದಣಿಗಾಗಿ ಸರ್ಕಾರವು ರಚಿಸಿರುವ ಆನ್ ಲೈನ್ ಪೋರ್ಟಲ್‌ನಲ್ಲಿ ನೋಂದಣಿ ಅಥವಾ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ನೇರ ವಾಕ್ ಇನ್ ನೋಂದಣಿ ಮಾಡಿಕೊಳ್ಳಬಹುದು. ಸರ್ಕಾರದ ಮಾರ್ಗಸೂಚಿಯನ್ವಯ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾಸ್ ಪೋರ್ಟ್ ಅಗತ್ಯ ದಾಖಲೆಗಳೊಂದಿಗೆ ಹೆಸರು ನೋಂದಾಯಿಸಿಕೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು. ಕೋವಿಡ್-19 ಸಾಂಕ್ರಾಮಿಕ ಖಾಯಿಲೆಯ ನಿರ್ಲಕ್ಷ್ಯ ಬೇಡ. ಪ್ರತಿಯೊಬ್ಬರೂ ಸರ್ಕಾರದ ಮಾರ್ಗಸೂಚಿ ಮತ್ತು ಮುಂಜಾಗ್ರತ ಕ್ರಮವನ್ನು ಮತ್ತು ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೊರೋನಾದ ವಿರುದ್ಧ ಹೋರಾಡುವುದು ಸದ್ಯದ ಆದ್ಯ ಕರ್ತವ್ಯವಾಗಿದೆ. ಕೋವಿಡ್ ಕಾರಣ ಸಾರ್ವಜನಿಕರಿಗೆ ಕಾನೂನಿನ ಅರಿವು ಮತ್ತು ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ನಂ.1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ನಂ. 1800-425-0131 ಹಾಗೂ ಕಛೇರಿ ದೂರವಾಣಿ ಸಂಖ್ಯೆ: 0821-2330130 ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : - - - – - -