ಕೊರೊನಾ ಲಸಿಕೆ ಹಂಚಿಕೆಯಲ್ಲಿ ‘ಕಿಕ್ ಬ್ಯಾಕ್’ ಆರೋಪ ಮಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್…. ಮೈಸೂರು,ಏಪ್ರಿಲ್,23,2021(..):ಕೊರೊನಾ ಹೆಸರಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಲೂಟಿ ಹೊಡೆಯುತ್ತಿದ್ದಾರೆ. ನನ್ನ ಪ್ರಕಾರ ಲಸಿಕೆ ಹಂಚಿಕೆಯಲ್ಲಿ ಕಿಕ್ ಬ್ಯಾಕ್ ಪಡೆದಿರಬಹುದು ಎನಿಸುತ್ತೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಕೊರೊನಾ ಹೆಸರಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಲೂಟಿ ಹೊಡೆಯುತ್ತಿದ್ದಾರೆ. ಪ್ರಧಾನಿ ಮೋದಿಯವರು ನಮ್ಮ ಜನ ಸಂಕಷ್ಟದಲ್ಲಿರುವಾಗ ಬೇರೆ ದೇಶಗಳಿಗೆ ಉಚಿತವಾಗಿ ಲಸಿಕೆ ನೀಡಿದ್ದಾರೆ. ಆದರೆ ನಮ್ಮ ದೇಶದಲ್ಲಿ ಒಂದು ಲಸಿಕೆಯನ್ನು ೩೦೦ ರಿಂದ ೬೦೦ ರೂ.ಗೆ ಮಾರಾಟ ಮಾಡಲಾಗುತ್ತಿದೆ. ನನ್ನ ಪ್ರಕಾರ ಲಸಿಕೆ ಹಂಚಿಕೆಯಲ್ಲಿ ಕಿಕ್ ಬ್ಯಾಕ್ ಪಡೆದಿರಬಹುದು ಎನಿಸುತ್ತೆ. ಮೋದಿ ಭಕ್ತರು ಅಥವಾ ಬಿಜೆಪಿ ಭಕ್ತರು ದುಡ್ಡು ಕೊಟ್ಟು ಲಸಿಕೆ ಪಡೆಯಲಿ. ಆದರೆ ಬಡವರಿಗೆ ಉಚಿತವಾಗಿ ಲಸಿಕೆ ನೀಡಲಿ ಎಂದು ಆಗ್ರಹಿಸಿದರು. ಪ್ರಧಾನಿ, ಸಿಎಂ, ಆರೋಗ್ಯ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ. ಒಂದು ವರ್ಷದ ಹಿಂದೆಯೇ ಎರಡನೇ ಅಲೆ ಬಗ್ಗೆ ತಜ್ಞರು ಸಲಹೆ ನೀಡಿದ್ದರೂ ಸರ್ಕಾರ ಕೇವಲ ಚುನಾವಣೆಯಲ್ಲಿ ಬ್ಯುಸಿಯಾಗುವ ಮೂಲಕ ಮತ್ತೊಮ್ಮೆ ಸಂಕಷ್ಟ ಉದ್ಭವವಾಗಲು ನಾಂದಿಹಾಡಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಲು ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೇ ಕಾರಣ. ಇವರ ವಿರುದ್ಧ ದಾಖಲಿಸಬೇಕು ಎಂದು ಒತ್ತಾಯಿಸಿದರು. ಕೊರೊನಾ ಸಂದರ್ಭ ಪಡಿತರದ ಜೊತೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಬೇಕಿತ್ತು ಆದರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ ಸಂಕಷ್ಟದಲ್ಲಿರುವ ಬಡವರಿಗೆ ಪಡಿತರವನ್ನೂ‌ ಕೂಡ ಕಡಿತ‌ ಮಾಡಿರುವುದು ಖಂಡನೀಯ. ಮುಂದೆ ನಮ್ಮ ಜನ ಕೊರೊನಾದಿಂದ ಸಾಯುವುದಕ್ಕಿಂತ ಹಸಿವಿನಿಂದ ಸಾಯುವ ಸ್ಥಿತಿ‌ ನಿರ್ಮಾಣ ಮಾಡಿದ್ದಾರೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಡಾ.ಪುಷ್ಪ ಅಮರನಾಥ್ ವಾಗ್ದಾಳಿ ನಡೆಸಿದರು. : ’ : - - - – -.