ಮೈಸೂರು ಜಿಲ್ಲೆಯಲ್ಲಿ 21 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಗುರಿ- ಆರೋಗ್ಯ ಸಚಿವ ಸುಧಾಕರ್ ಮೈಸೂರು,ಏಪ್ರಿಲ್,22,2021(..):ಮೈಸೂರು ಜಿಲ್ಲೆಯಲ್ಲಿ 21 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಹಾಕುವ ಗುರಿಯಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಡಾ. ಕೆ. ಸುಧಾಕರ್, ಬೆಂಗಳೂರಿನ ನಂತರ ಮೈಸೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕಿತರಿದ್ದಾರೆ. ಏಪ್ರಿಲ್ 1 ರ ನಂತರ ಮೈಸೂರಿನಲ್ಲಿ ಸೋಂಕಿನ ಪ್ರಮಾಣ‌ ಹೆಚ್ಚಾಗಿದೆ. ಕೊರೋನಾ ಲಸಿಕೆ ನೀಡುವ ವಿಚಾರದಲ್ಲಿ ಮೈಸೂರು ಇಡೀ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. 18 ವರ್ಷ ಮೇಲ್ಪಟ್ಟವರಿಗೂ ಮೇ 1 ರಿಂದ ಕೊರೊನಾ ಲಸಿಕೆ ನೀಡಲಾಗುವುದು. ಮೈಸೂರು ಜಿಲ್ಲೆಯಲ್ಲಿ 21 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಹಾಕುವ ಗುರಿಯಿದೆ. ಮೈಸೂರು ಜಿಲ್ಲೆಯಲ್ಲಿ ಇದುವರೆಗೆ 7 ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಅತ್ಯಂತ ವೇಗವಾಗಿ ಕೊರೊನಾ ಲಸಿಕೆಯನ್ನು ಹಾಕಿದರೆ ಕೋವಿಡ್ ಹತೋಟಿ ಸಾಧ್ಯವಾಗಲಿದೆ. ಹಾಗಾಗಿ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಔಷಧಿ, ಆಕ್ಸಿಜನ್ ಕೊರತೆ ಉಂಟಾಗದಂತೆ ಡ್ರಗ್ ಕಂಟ್ರೋಲರ್ ಕಚೇರಿಯಿಂದ ಹೆಲ್ಪ್ ಲೈನ್ ಕಾಲ್ ಸೆಂಟರ್ ಆರಂಭಿಸಲಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡಲು ವಾರ್ ರೂಮ್ ಸದಾ ಕ್ರಿಯಾಶೀಲವಾಗಿರಲಿದೆ ಎಂದು ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಾಗಿರುವ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ಕೆ‌. ಸುಧಾಕರ್ , ಮೈಸೂರಿನಲ್ಲಿ ಬಹುತೇಕ ತಡವಾಗಿ ಆಸ್ಪತ್ರೆಗೆ ಬಂದು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೆಲ ಸೋಂಕಿತರು ಆಸ್ಪತ್ರೆಗೆ ಬರುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ತಿಳಿದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಚುನಾಯಿತ ಜನಪ್ರತಿನಿಧಿಗಳ ನೇತೃತ್ವದಲ್ಲಿ ಕೊರೊನಾ ಕುರಿತು ಅರಿವು ಮೂಡಿಸಲಾಗುತ್ತಿದೆ. ಅವಶ್ಯಕವಾಗಿ ಭಯ, ಆತಂಕಗೊಳ್ಳುವ ಜನರಿಗೆ ಸರಿಯಾದ ಮಾರ್ಗದರ್ಶನ ನೀಡಲಾಗುವುದು. ಇದಕ್ಕಾಗಿ ಸ್ವಯಂ ಸೇವಾ ಸಂಸ್ಥೆಗಳು, ಗಣ್ಯರನ್ನು ತೊಡಗಿಸಿಕೊಂಡು ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು. : - -21 - - - -