ರೈತರಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ದೊರಕುತ್ತಿಲ್ಲ: ಪ್ರತಿಭಟನೆ ಎಚ್ಚರಿಕೆ ನೀಡಿದ ಶಾಸಕ ಸಾ.ರಾ.ಮಹೇಶ್… ಮೈಸೂರು,ಏಪ್ರಿಲ್,9,2021(..):ರೈತರಿಗೆ ವಿದ್ಯುತ್ ಸರಿಯಾದ ಪ್ರಮಾಣದಲ್ಲಿ ದೊರಕುತ್ತಿಲ್ಲ. ರೈತರಿಗೆ ತ್ರೀಫೇಸ್ ವಿದ್ಯುತ್ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸೆಸ್ಕ್ ಎಂಡಿ ಕಚೇರಿಗೆ ಬೀಗ ಹಾಕುತ್ತೇವೆ. ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿದ್ಯುತ್ ಕೊರತೆ ಸಂಬಂಧ ಶಾಸಕ ಸಾರಾ ಮಹೇಶ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿದ್ಯುತ್ ಶುಲ್ಕ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ ಸಾ.ರಾ ಮಹೇಶ್, ರೈತರಿಗೆ ವಿದ್ಯುತ್ ಸರಿಯಾದ ಪ್ರಮಾಣದಲ್ಲಿ ದೊರಕುತ್ತಿಲ್ಲ. ಪಂಪ್‌ ಸೆಟ್‌ ಗಳನ್ನೇ ನಂಬಿ ಬದುಕುತ್ತಿರುವ ರೈತರು ಕಂಗಾಲಾಗಿದ್ದಾರೆ. ಕೆಲವು ಭಾಗಗಳಲ್ಲಿ ತ್ರಿಫೇಸ್ ವಿದ್ಯುತ್ ಇಲ್ಲದೇ ಸಮಸ್ಯೆಯಾಗಿದೆ. ಆಯಾ ಭಾಗಗಳಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಕೆಗೆ ಮನವಿ ಮಾಡಲಾಗಿದೆ. ಇದುವರೆಗೂ ಸಂಬಂಧಿಸಿದವರು ಗಮನಹರಿಸುತ್ತಿಲ್ಲ ಎಂದು ಕಿಡಿ ಕಾರಿದರು. ರೈತರ ಪಂಪ್‌ಸೆಟ್‌ ಗಳಿಗೆ 7 ಗಂಟೆ ತ್ರೀಫೇಸ್ ವಿದ್ಯುತ್ ಸರಬರಾಜು ಮಾಡುವ ಭರವಸೆ ನೀಡಿದೆ. ಆದ್ರೆ ಸರ್ಕಾರ ವಿಧಾನಸಭೆಯಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಿಲ್ಲ. ಏ.6ರಿಂದ ವಿದ್ಯುತ್ ಸರಬರಾಜಿಗೆ ಸಮಯ ನಿಗದಿ ಮಾಡಿದೆ. ಹಗಲು 4.30 ಮತ್ತು ರಾತ್ರಿ 2.30 ಗಂಟೆ ಕರೆಂಟ್ ಕೊಡಬೇಕು. ಆದರೆ ರೈತರಿಗೆ ತ್ರೀಫೇಸ್ ವಿದ್ಯುತ್ ಸಿಗುತ್ತಿಲ್ಲ. 7 ಗಂಟೆ ಕರೆಂಟ್ ಕೊಡುತ್ತೇವೆ ಅಂತಾರೆ. ವಾಸ್ತವದಲ್ಲಿ 3 ಗಂಟೆ ವಿದ್ಯುತ್ ಕೂಡ ಸಿಗುತ್ತಿಲ್ಲ. ಎಂದು ಶಾಸಕ ಸಾ.ರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು. : – - -- - –