“ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಬೇಕು” : ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಬೆಂಗಳೂರು,ಮಾರ್ಚ್,28,2021(..): ರಾಜ್ಯದಲ್ಲಿ ಬಿ.ಎಸ್.ವೈ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸರ್ಕಾರ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಸ್ವಾತಂತ್ರ್ಯ ನಂತರದಿಂದ ಈವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದಿದ್ದಾರೆ. ಬೆಂಗಳೂರು ನಗರದ ಶೇ.90 ಹಾಗೂ ರಾಜ್ಯದ ಗ್ರಾಮೀಣ ಭಾಗದ ಶೇ.100 ರಷ್ಟು ಕುಟುಂಬಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಇರುವ ವೈಜ್ಞಾನಿಕ ಸಮೀಕ್ಷೆಯೊಂದರ ವರದಿ ಸ್ವೀಕರಿಸದಿರಲು ಕಾರಣ ಏನು ಎಂಬುದನ್ನು ರಾಜ್ಯ ಸರ್ಕಾರ ಹೇಳಲಿ ಎಂದು ಕಿಡಿಕಾರಿದ್ದಾರೆ.ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹವಿದ್ದಾವೆ ಅವುಗಳೆಲ್ಲವಕ್ಕೂ ಸರ್ಕಾರ ಮೀಸಲಾತಿ ನೀಡಲು ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆ, ಅರ್ಹರಿಗೆ ಮಾತ್ರ ಮೀಸಲು ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಕೋಲಾರದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದೆ. ಶಾಸಕರಾದ ರಮೇಶ್ ಕುಮಾರ್, ನಜೀರ್ ಅಹಮದ್, ನಂಜೇಗೌಡ, ನಾರಾಯಣಸ್ವಾಮಿ, ರೂಪಾ ಹಾಜರಿದ್ದರು. : -------- -