ಸಿದ್ಧರಾಮಯ್ಯ ಸಹ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಟ್ಟಿರುತ್ತಾರೆ-ಸಚಿವ ಎಸ್ ಟಿ ಸೋಮಶೇಖರ್… ಮೈಸೂರು,ಫೆಬ್ರವರಿ,22,2021(..):ಶ್ರೀರಾಮ ಮಂದಿರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ತಿಳಿಸಿದರು. ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್, ಸರ್ಕಾರ ಸುಗಮವಾಗಿ, ದಕ್ಷವಾಗಿ ಹೋಗುತ್ತಿದೆ. ಮಾತನಾಡಲೂ ಏನೂ ಉಳಿದಿಲ್ಲವಾದ್ದರಿಂದ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇವರು ಬಾಯಿ ಚಪಲಕ್ಕೆ ಲೆಕ್ಕ ಕೇಳುತ್ತಿದ್ದಾರೆ ಎಂದು ಹೇಳಿದರು. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಯಾರೂ ಸಹ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಒಂದೇ ಒಂದು ಪೈಸೆ ಸಹ ರಾಮಮಂದಿರಕ್ಕೆ ಉಪಯೋಗವಾಗಲಿದೆ ಹಾಗೂ ಎಲ್ಲವಕ್ಕೂ ಲೆಕ್ಕವನ್ನು ಇಡಲಾಗಿದೆ. ದೇಣಿಗೆ ಸಂಗ್ರಹಿಸಿದ ಮನೆಯ ಸಂಖ್ಯೆ, ಸಹಿ ಪಡೆದು, ಪ್ಯಾನ್ ಸಂಖ್ಯೆಯನ್ನು ನಮೂದಿಸಲಾಗುತ್ತಿದೆ. ಜೊತೆಗೆ ರಶೀದಿಯನ್ನು ಸಹ ಕೊಡಲಾಗುತ್ತಿದೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ದೇಣಿಗೆಯನ್ನು ಜನರು ಸ್ವಯಂಪ್ರೇರಿತರಾಗಿ ಕೊಡುತ್ತಿದ್ದಾರೆ. ಹೀಗಾಗಿಯೇ ವಿರೋಧ ಪಕ್ಷದವರು ಹೇಳಿದಂತೆ ಶ್ರೀರಾಮಮಂದಿರಕ್ಕೆ ನೀಡಿದ ದೇಣಿಗೆಯ ಹಣ ದುರುಪಯೋಗವಾಗಿಲ್ಲ. ಖಂಡಿತವಾಗಿಯೂ ದೇಣಿಗೆಯ ಲೆಕ್ಕ ಸಿಗಲಿದೆ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು. ಇದೇ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸಲು ಲಿಫ್ಟ್ ಅವಶ್ಯಕತೆ ತುಂಬಾ ಇದೆ. ಬಹಳ ವರ್ಷಗಳಿಂದ ಶಿಥಿಲಾವಸ್ಥೆಯಿಂದಿತ್ತು. ಹೀಗಾಗಿ ಇದರ ದುರಸ್ತಿ ಇಲ್ಲವೇ ಹೊಸ ಲಿಫ್ಟ್ ಬೇಕೆಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ದೀಕ್ಷಿತ್ ಅವರು ಮನವಿ ಕೊಡುತ್ತಲೇ ಬಂದಿದ್ದಾರೆ. ಇದಕ್ಕಾಗಿ 5.50 ಲಕ್ಷ ರೂ. ಅನುದಾನ ಬೇಕಿತ್ತು. ಉಸ್ತುವಾರಿ ಸಚಿವರು ಇದರ ಬಗ್ಗೆ ಆಸಕ್ತಿ ತೋರಿ ಅನುದಾನ ಕೊಡಿಸಿದ್ದು, ಇದೀಗ ಲಿಫ್ಟ್ ದೇವಸ್ಥಾನದ ಬಳಕೆಗೆ ಲಭ್ಯವಾಗಿದೆ ಎಂದು ಹೇಳಿದರು. ಬೆಟ್ಟದ ಮಳಿಗೆಗಳಿಗೆ ಸಂಬಂಧಪಟ್ಟಂತೆ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸ್ಥಳಾಂತರ ಹಾಗೂ ಮೂಲ ಸೌಕರ್ಯಕ್ಕೆ ಸಂಬಂಧಪಟ್ಟಂತೆ ಸೂಕ್ತ ನಿರ್ದೇಶನ ನೀಡುತ್ತಿದ್ದಾರೆ ಎಂದು ಸಂಸದರಾದ ಪ್ರತಾಪ್ ಸಿಂಹ ಹೇಳಿದರು. ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. : – - - – – - - .