ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿ : ಈ ವೇಳೆ ಏನಾಯ್ತು ಗೊತ್ತ..? ಮೈಸೂರು,ಜನವರಿ,12,2021(..): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಮುಖಾಮುಖಿಯಾದ ಮೊದಲ ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ಧಾಟ ಬಹಿರಂಗಗೊಂಡಿದೆ. ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಇಂದು ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಸಾ.ರಾ ಮಹೇಶ್ ಪಾಲ್ಗೊಂಡಿದ್ದರು. ಈ ಸಭೆಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಗಮಿಸಿದ್ದು, ವೇದಿಕೆಯಲ್ಲಿ ಆಸನದ ವ್ಯವಸ್ಥೆ ಇರದಿದ್ದ ಹಿನ್ನೆಲೆ, ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತರು. ಬಳಿಕ ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ, ನಿಮ್ಮ ಮಾತು ಕೇಳುತ್ತಿಲ್ಲ, ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಸಾ.ರಾ ಮಹೇಶ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ರೋಹಿಣಿ ಸಿಂಧೂರಿ, ನಾನು ಮಾಸ್ಕ್ ತೆಗೆಯವುದಿಲ್ಲ, ಮಾಸ್ಕ್ ತೆಗೆದು ಮಾತನಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಉತ್ತರ ಕೊಟ್ಟರು. ಅಲ್ಲದೆ ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ ಮಹೇಶ್, ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದೀರಿ ಸಂತೋಷ. ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೆ. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನು ನೀವು ಸ್ವಾಗತಿಸಿಲ್ಲ, ಆದರೂ ಪರವಾಗಿಲ್ಲ. ಸಮಯ ಇದ್ದರೆ ಇರಿ, ಬೇರೆ ಕೆಲಸ ಇದ್ದರೆ ಹೋಗಿ ಎಂದು ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಸಾ.ರಾ ಮಹೇಶ್ ಹೇಳಿದರು. ಈ ರೀತಿ ಶಾಸಕ ಸಾರಾ ಮಹೇಶ್ ಹೇಳುತ್ತಿದ್ದಂತೆ ರೋಹಿಣಿ ಸಿಂಧೂರಿ ಅವರು ತಕ್ಷಣವೇ ಸಭೆಯಿಂದ ಹೊರನಡೆದ ಘಟನೆ ನಡೆಯಿತು. : -----...--