ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ದುರ್ಬಳಕೆಗೆ ಸರ್ಕಾರ ಸಂಚು- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಆರೋಪ… ಮೈಸೂರು,ಡಿಸೆಂಬರ್,31,2020(..):ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ದುರ್ಬಳಕೆಗೆ ಸರ್ಕಾರ ಸಂಚು ರೂಪಿಸುತ್ತಿದೆ. ಇದಕ್ಕಾಗಿ ಅಭಿವೃದ್ಧಿ ನೆಪದಲ್ಲಿ ಜನವರಿ 4 ಮತ್ತು 5 ರಂದು ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಶಾಸಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಎ ವೆಂಕಟೇಶ್, ಜನವರಿ 4, 5 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಶಾಸಕರ ಸಭೆಯನ್ನು ಕರೆದಿರುವುದು ಮೀಸಲಾತಿ ದುರ್ಬಳಕೆ ಮಾಡಿಕೊಳ್ಳಲು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಪಡೆಯಲು ಅಭಿವೃದ್ಧಿ ಕಾರ್ಯಗಳ ನೆಪದಲ್ಲಿ ಸಭೆ ಕರೆಯಲಾಗಿದೆ. ಇದೊಂದು ಪ್ರಜಾಪ್ರಭುತ್ವದ ಅತ್ಯಂತ ದುರಂತ, ಮೀಸಲಾತಿ ಪ್ರಕಟಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಯಾವ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಲು ಸಾಧ್ಯವಾಗುವುದಿಲ್ಲವೋ ಅಂತಹ ಕಡೆ ಹೇರಳವಾಗಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು ಗ್ರಾಮಾಂತರ ಪ್ರದೇಶದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಸಂಚು ನಡೆಸುತ್ತಿದೆ. ಇದಕ್ಕಾಗಿಯೇ ಶಾಸಕರ ಸಭೆ ಆಯೋಜಿಸಿದೆ ಎಂದು ಹೆಚ್.ಎ ವೆಂಕಟೇಶ್ ಕಿಡಿಕಾರಿದರು. ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ್ದೇವೆ ಎಂಬ ಬಿಜೆಪಿ, ಹೇಳಿಕೆಯು ಜನತೆಯ ಮುಂದೆ ಅಪಹಾಸ್ಯಕ್ಕೆ ಈಡಾಗಿದೆ ಎಂದು ಲೇವಡಿ ಮಾಡಿದ್ದಾರೆ. ಶ್ವೇತ ಪತ್ರಕ್ಕೆ ಆಗ್ರಹ…. ರಾಜ್ಯ ಸರ್ಕಾರ ಗೊತ್ತು ಗುರಿ ಇಲ್ಲದೆ ಅನಾವಶ್ಯಕವಾಗಿ ಕೋಟ್ಯಾಂತರ ರೂಪಾಯಿ ಸಾಲ ಮಾಡುತ್ತಿದೆ. ಅತ್ಯಾವಶ್ಯಕವಾಗಿರುವ ಅಭಿವೃದ್ಧಿ ಕೆಲಸಕ್ಕೆ ಆದ್ಯತೆ ಮೇಲೆ ಹಣಕಾಸು ಒದಗಿಸಬೇಕಿದೆ. ಆದರೆ ಅದ್ಯತಾವಲಯವನ್ನು ಪರಿಗಣಿಸದೆ ಬೇಕಾಬಿಟ್ಟಿಯಾಗಿ ಸರ್ಕಾರದ ಹಣವನ್ನು ಬಿಲ್ ಬರೆಯುವ’ ಕೆಲಸಗಳಿಗಾಗಿ ಹಣ ದುಂದು ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಎಂದೆಂದೂ ಕಾಣದಂತಹ ಸಾಲದ ಕೂಪಕ್ಕೆ ತಳ್ಳುತ್ತಿದೆ. ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಸತ್ಯಾಂಶ ತಿಳಿಯಲು ಜನತೆಯ ಮುಂದೆ ಶ್ವೇತಪತ್ರ ಹೊರಡಿಸಲಿ ಎಂದು ಸರ್ಕಾರಕ್ಕೆ ಹೆಚ್.ಎ ವೆಂಕಟೇಶ್ ಆಗ್ರಹಿಸಿದ್ದಾರೆ. : - - – – – --