ಸಚಿವ ಸಂಪುಟ ವಿಸ್ತರಣೆ ಕುರಿತು ಸುಳಿವು ನೀಡಿದ ಸಚಿವ ರಮೇಶ್ ಜಾರಕಿಹೊಳಿ….. ಬೆಳಗಾವಿ,ಡಿಸೆಂಬರ್,17,2020(..):ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹಲವು ಅಡ್ಡಿ ಆತಂಕಗಳು ಉಂಟಾಗುತ್ತಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಭೇಟಿ ನೀಡಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಿದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಇನ್ನೂ ಕಾಲ ಕೂಡಿ ಬಂದಿಲ್ಲ. ಹೌದು ಕಳೆದ ಒಂದು ತಿಂಗಳ ಹಿಂದೆಯೇ ಸಿಎಂ ಬಿಎಸ್ ಯಡಯೂರಪ್ಪ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದರು. ಪಕ್ಷದ ಹೈಕಮಾಂಡ್ ಭೇಟಿಗೆ ತೆರಳಿ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಮಾತ್ರ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಲಿಲ್ಲ. ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಮಾತ್ರ ನಿರಾಸೆ ಉಂಟಾಗುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ತಡೆ ಬಿದ್ದಿದೆ. ಡಿಸೆಂಬರ್ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸುಳಿವು ನೀಡಿದ್ದಾರೆ. : - – .