ಚೀಪ್ ಪಬ್ಲಿಸಿಟಿ ಗಾಗಿ ಮಾತನಾಡುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ : ಸಂಸದೆ ಸುಮಲತಾ ಅಂಬರೀಷ್ ಮೈಸೂರು,ಡಿಸೆಂಬರ್,13,2020(..):ಚೀಪ್ ಪಬ್ಲಿಸಿಟಿ ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದು ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ನಟಿ, ಸಂಸದೆ ಸುಮಲತಾ ಅಂಬರೀಷ್ ಕಿಡಿಕಾರಿದ್ದಾರೆ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ನಟ ದಿ.ವಿಷ್ಣುವರ್ಧನ್ ಕುರಿತು ಇತ್ತೀಚೆಗೆ ವಿಜಯ್ ರಂಗರಾಜು ಹಗುರವಾಗಿ ಆಡಿರುವ ಮಾತಿಗೆ ಸುಮಲತಾ ಅಂಬರೀಷ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ. ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನೆತೆ ಏನೆಂಬುವುದು ಚೆನ್ನಾಗಿಯೇ ಗೊತ್ತು ಎಂದು ವಿಜಯ್ ರಂಗರಾಜುಗೆ ತಿರುಗೇಟು ನೀಡಿದ್ದಾರೆ. ವಿಷ್ಣು ನಮ್ಮನ್ನು ದೈಹಿಕವಾಗಿ ದೂರವಾಗಿ ಹತ್ತು ವರುಷಗಳೇ ಕಳೆದರೂ ಅವರ ಮೇಲಿನ ಅಭಿಮಾನ ಎಳ್ಳಷ್ಟೂ ಕಡಿಮೆಯಾಗದಿರುವುದೆ ಅದಕ್ಕೆ ಸಾಕ್ಷಿ. ಯಾರಿಗೂ ತಿಳಿಯದ, ಯಾರೋ ಒಬ್ಬ ಅವರ ಬಗ್ಗೆ ಮನಸ್ಸೋ ಇಚ್ಛೆ ಕೆಲವು ಕೆಟ್ಟ ಪದಗಳಿಂದ ನಿಂದಿಸಿದರೆ ಅದರಿಂದ ನಮ್ಮ ವಿಷ್ಣುವಿನ ಘನತೆಗೆ ಒಂದು ಸಾಸಿವೆ ಕಾಳಷ್ಟು ಧಕ್ಕೆಯಾಗದು ಎಂದು ಹೇಳಿದ್ದಾರೆ. ಅದು ಕೇವಲ ಅಂತಹ ಬಾಯಿಬಡುಕ ವ್ಯಕ್ತಿಯ ಕೆಟ್ಟ ಗುಣ ಹಾಗು ನೀಚ ಬುದ್ದಿಯ ಅನಾವರಣವಲ್ಲದೆ ಬೇರೇನಲ್ಲ. ಅದರಲ್ಲೂ ನಮ್ಮನ್ನು ಅಗಲಿದ ವ್ಯಕ್ತಿಯ ಬಗ್ಗೆ ಈ ರೀತಿಯ ತುಚ್ಛವಾಗಿ ಮಾತನಾಡುವುದು ಕ್ಷಮಿಸಲಾಗದ ದೊಡ್ಡ ಅಪರಾಧ ಎಂದು ಟ್ವೀಟ್ ನಲ್ಲಿ ವಿಜಯ್ ರಂಗರಾಜು ನಡವಳಿಕೆಯನ್ನು ಟೀಕಿಸಿದ್ದಾರೆ. : ----- --