ಡಿ.5 ರಂದು ಕರ್ನಾಟಕ ಬಂದ್: ಮೈಸೂರಿನಲ್ಲಿ ಅಂದು ಮಾನವ ಸರಪಳಿ ನಿರ್ಮಿಸಿ ಹೋರಾಟ… ಮೈಸೂರು,ಡಿಸೆಂಬರ್,3,2020(..):ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಅಂದು ಮೈಸೂರಿನಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ಸೋಮೇಗೌಡ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ಸೋಮೇಗೌಡ, ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಕರ್ನಾಟಕ ಜನಪರ ವೇದಿಕೆಯಿಂದ ಬೆಂಬಲ ನೀಡುತ್ತೇವೆ. ಮರಾಠ ಅಭಿವೃದ್ಧಿ‌ನಿಗಮ ಸ್ಥಾಪನೆ ಮಾಡಿರುವುದು ಖಂಡನೀಯ. ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ. ಕೂಡಲೇ ನಿಗಮ ಸ್ಥಾಪಿನೆ ಆದೇಶವನ್ನು ಹಿಂಪಡೆಯಬೇಕು. ಈ ಹಿನ್ನೆಲೆ ಡಿ.5 ರಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು. ಹಾಗೆಯೇ ಅಂದು ಮೆಟ್ರೋಪೋಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಗೆ ಮನವಿ ಸಲ್ಲಿಸುತ್ತೇವೆ ಎಂದು ಸೋಮೇಗೌಡ ತಿಳಿಸಿದ್ದಾರೆ. : – 5- –- -