ಅಧಿವೇಶನದ ವೇಳೆ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ರೈತ ಮುಖಂಡರಿಂದ ನಿರ್ಧಾರ… ಮೈಸೂರು,ಡಿಸೆಂಬರ್,2,2020(..):ಭೂ ಸುಧರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ಹಾಗೂ ದೆಹಲಿಯಲ್ಲಿ ನಡೆದ ರೈತರ ಮೇಲಿನ ಹಲ್ಲೆ ಖಂಡಿಸಿ ಅಧಿವೇಶನದ ವೇಳೆ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ರೈತ ಮುಖಂಡರು ನಿರ್ಧಾರ ಮಾಡಿದ್ದಾರೆ. ಈ ಕುರಿತು ಇಂದು ಮೈಸೂರಿನ ಪತ್ರಕರ್ತ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಹೋರಾಟ ನಡೆಸಲು ರೈತ ಸಂಘಟನೆಗಳಿಂದ ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7 ರಿಂದ 15 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರದ ಗಮನವನ್ನು ಸೆಳೆಯಲು ಧರಣಿ ಸತ್ಯಾಗ್ರಹದ ಜೊತೆಗೆ ಪ್ರತಿಭಟನೆ ನಡೆಸಲಾಗುತ್ತದೆ. ಡಿಸೆಂಬರ್ 7 ರಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡುವ ಸಲುವಾಗಿ ಎಲ್ಲಾ ಜಿಲ್ಲೆಗಳಿಂದ ಮೂರ್ನಾಲ್ಕು ವಾಹನಗಳಲ್ಲಿ ದೆಹಲಿಗೆ ತೆರಳಲು ನಿರ್ಧಾರ ಮಾಡಲಾಗಿದೆ. ಈ ಕುರಿತು ಇಂದು ಅಥವಾ ನಾಳೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದರು. : – - – ---