ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀರಿಗೆ ಹಾಹಾಕಾರ ಪಡುವ ಪರಿಸ್ಥಿತಿ ಇತ್ತು : ಸಂಸದ ಪ್ರತಾಪ್ ಸಿಂಹ ಆಕ್ರೋಶ ಮೈಸೂರು,ಅಕ್ಟೋಬರ್,19,2020(..): ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ಧಾಗ ಸರಿಯಾಗಿ ಮಳೆಯಾಗದೇ ಜನರು ನೀರು, ನೀರು ಎಂದು ಹಾಹಾಕಾರ ಪಡುವ ಪರಿಸ್ಥಿತಿ ಇತ್ತು. ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ನೀರೋ ನೀರು, ಹಸಿರೋ ಹಸಿರು ಎನ್ನುವಂತ್ತಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 2018 ರಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಗೆ 20 ಜನ ಅಮಾಯಕರು ಪ್ರಾಣ ಕಳೆದುಕೊಂಡರು, 3 ಸಾವಿರಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಕೊಚ್ಚಿಕೊಂಡು ಹೋಯಿತು. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವ ಕೆಲಸವನ್ನೂ ಯಡಿಯೂರಪ್ಪ ಮಾಡಿದ್ದಾರೆ ಎಂದರು. ಈಗ ಆರೋಪ ಮಾಡುವವರು, ತಾವು ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡರೆ ಈ ರೀತಿಯೆಲ್ಲಾ ಮಾತನಾಡುವುದನ್ನು ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು. ಪ್ರವಾಹ ಬಂದಾಗ ತೊಂದರೆ, ಕಷ್ಟನಷ್ಟಗಳು ಉಂಟಾಗುವುದು ಸಹಜ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ನಂತರ ಉತ್ತಮ ಮಳೆಯಾಗಿ ಕೆರೆಕಟ್ಟೆಗಳು ಭರ್ತಿಯಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ಪ್ರವಾಹ ಬಂದಾಗ ತೊಂದರೆ, ಕಷ್ಟನಷ್ಟಗಳು ಉಂಟಾಗುವುದು ಸಹಜ. ಪ್ರವಾಹ ಬಂದಾಗ ಭೂಮಿಗೆ ನೀರುಣಿಸುವುದರಿಂದ ಹಸಿರು ಬರುತ್ತದೆ. ಹಾಗಾಗಿ, ಪ್ರವಾಹದಿಂದ ತಾತ್ಕಾಲಿಕವಾಗಿ ಹಿನ್ನಡೆ ಆದರೂ ಮುಂದಿನ ದಿನಗಳಲ್ಲಿ ಒಳಿತಾಗುತ್ತದೆ ಎಂದರು. : ----- -