ಮೈಸೂರಿನಲ್ಲಿ ಕಾರ್ಮಿಕರ ಪ್ರತಿಭಟನೆ: ಧರಣಿನಿರತರ ಜತೆ ಸಚಿವ ನಾರಾಯಣಗೌಡ ವಾಗ್ವಾದ…. ಮೈಸೂರು,ಅಕ್ಟೋಬರ್,17,2020(..):ಕೆಲಸ ಖಾಯಂ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ತೋಟಗಾರಿಕೆ ಸಚಿವ ನಾರಾಯಣಗೌಡ ಪ್ರತಿಭಟನಾನಿರತರ ಮೇಲೆ ದರ್ಪ ತೋರಿದ್ದಾರೆ ಎನ್ನಲಾಗಿದೆ. ಹೊರಗುತ್ತಿಗೆ ನೌಕರರ ಕೆಲಸ ಖಾಯಂ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಮೈಸೂರಿನ ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರ ಹಾಗೂ ಕಾರ್ಖಾನೆ ಮೇಲಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಖಾಲಿ ಹುದ್ದೆಗಳ ಭರ್ತಿ ಮಾಡುವಂತೆ ಹಲವು ವರ್ಷಗಳಿಂದ ರೇಷ್ಮೆ ನೌಕರರ ಯೂನಿಯನ್ ಮನವಿ ಸಲ್ಲಿಸುತ್ತಾ ಬಂದಿದೆ. ಆದರೆ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿಲ್ಲ. ಹೀಗಾಗಿ ಸರ್ಕಾರ ಮತ್ತು ಕಾರ್ಖಾನೆ ಮೇಲಾಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು. ಖಾಲಿ ಇರುವ ಹುದ್ದೆಗಳ ಭರ್ತಿ ಜೊತೆಗೆ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು. ಒಂದು ವೇಳೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಇದೇ ರೀತಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತೋಟಗಾರಿಕಾ ಸಚಿವ ನಾರಾಯಣಗೌಡ, ಪ್ರತಿಭಟನಾಕಾರರ ಜತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೆ ಪ್ರತಿಭಟನಾಕಾರ ನೇತೃತ್ವ ವಹಿಸಿದ ವ್ಯಕ್ತಿಗೆ ಕೈ ತೋರಿಸಿ ಘೋಷಣೆ ಕೂಗದಂತೆ ಸಚಿವ ನಾರಾಯಣಗೌಡ ಎಚ್ಚರಿಕೆ ನೀಡಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗದಂತೆ ಪ್ರತಿಭಟನಾನಿರತ ಕಾರ್ಮಿಕರಿಗೆ ತಾಕೀತು ಮಾಡಿದರು. . : - - –-- -