ದಸರಾ ವೇಳೆ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ : ಮೈಸೂರು ಜಿಲ್ಲಾಡಳಿತ ನಿರ್ಧಾರದ ವಿರುದ್ಧ ತೀವ್ರ ಅಸಮಾಧಾನ .. ಮೈಸೂರು,ಅಕ್ಟೋಬರ್,16,2020(..):ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ದಸರಾ ವೇಳೆ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ವಾಹನ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲು ಮಾಲೀಕರ ಸಂಘ, ವಾಹನ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೋಟೆಲ್, ಲಾಡ್ಜ್, ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ನಂಬಿಕೊಂಡು ಸಾವಿರಾರು ಕಾರ್ಮಿಕ ಕುಟುಂಬಗಳು ಜೀವನ ನಡೆಸುತ್ತಿದ್ದಾರೆ. ನಾವು ಲಾಕ್ ಡೌನ್ ತೆರವಿನ ಆದೇಶದಿಂದ ಹೋಟೆಲ್ ಗಳ ಬುಕಿಂಗ್ ಪ್ರಾರಂಭಿಸಿಲಾಗಿದೆ. ಇದೀಗ ಏಕಾಏಕಿ ಈ ರೀತಿ ನಿರ್ಧಾರ ತೆಗೆದುಕೊಂಡರೇ ಮೈಸೂರಿಗರು ಪ್ರವಾಸಿಗರು ಬರುವುದಾದರೂ ಹೇಗೆ..? ಪ್ರವಾಸಿಗರು ಬರದೇ ಹೋದರೆ ನಮ್ಮ ಜೀವನ ನಡೆಸುವುದಾದರೂ ಹೇಗೆ ಎಂದು ಸದಸ್ಯರು ಪ್ರಶ್ನಿಸಿದ್ದಾರೆ. ಜಿಲ್ಲಾಡಳಿತ ಕೋವಿಡ್ ನಿರ್ವಹಣೆಗೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದನ್ನು ಬಿಟ್ಟು ಪ್ರೇಕ್ಷಣೀಯ ಸ್ಥಳಗಳಿಗೆ ನಿರ್ಬಂಧವಿಧಿಸಿರುವುದು ಸರಿಯಲ್ಲ ಎಂದು ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲು ಮಾಲೀಕರ ಸಂಘ, ವಾಹನ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ಬೇಸರ ವ್ಯಕ್ತಪಡಿಸಿದರು. ಕೋವಿಡ್ ಹಿನ್ನೆಲೆ ಮೈಸೂರು ದಸರಾ ಮಹೋತ್ಸವವನ್ನ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಣೆಗೆ ಸರ್ಕಾರ ಮುಂದಾಗಿದ್ದು, ಹೆಚ್ಚಿನ ಜನಸಂಖ್ಯೆ ಸೇರದಂತೆ ಮುಂಜಾಗ್ರತೆ ವಹಿಸಿ ದಸರಾ ಸಮಯದಲ್ಲಿ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಬಂಧ ವಿಧಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಸಂಘದ ಪ್ರಶಾಂತ್ ಸೇರಿದಂತೆ ಟ್ಯಾಕ್ಸಿ ಮಾಲೀಕರು ಹಾಗೂ ಸಂಘದ ಸದಸ್ಯರು ಭಾಗಿಯಾಗಿದ್ದರು. : - - - -- - - -