ಶಿಕ್ಷಣ ಕ್ಷೇತ್ರದಲ್ಲಿ ಸುತ್ತೂರು ಮಠದ ಸಾಧನೆಗೆ ಡಿಸಿಎಂ ಅಶ್ವಥ್ ನಾರಾಯಣ್ ಮೆಚ್ಚುಗೆ….. ಬೆಂಗಳೂರು,ಅಕ್ಟೋಬರ್,15,2020(..):ಗುಣಮಟ್ಟದ ಕಲಿಕೆ ಮತ್ತು ಬೋಧನೆಯಲ್ಲಿ ಮುಂಚೂಣಿಯಲ್ಲಿ ಸುತ್ತೂರು ಮಠದ ಶಿಕ್ಷಣ ಸಂಸ್ಥೆಗಳು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳು ಬದಲಾಗುತ್ತಿರುವ ಕಾಲಮಾನಕ್ಕೆ ತಕ್ಕಂತೆ ತಮ್ಮ ಗುಣಮಟ್ಟವನ್ನು ವೃದ್ಧಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಕರೆ ನೀಡಿದರು. ಸುತ್ತೂರು ಮಠ ನಡೆಸುತ್ತಿರುವ ಎಂಟು ಶಿಕ್ಷಣ ಸಂಸ್ಥೆಗಳಿಗೆ ಭಾರತೀಯ ಕಾಲೇಜು ಮತ್ತು ವಿಶ್ವವಿದ್ಯಾಲಯ ರೇಟಿಂಗ್‌ ಸಂಸ್ಥೆಯಿಂದ ʼಡೈಮಂಡ್‌ʼ ಮತ್ತು ʼಗೋಲ್ಡ್‌ʼ ರೇಟಿಂಗ್‌ ಸಿಕ್ಕಿರುವ ಹಿನ್ನೆಲೆ ಮಠದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಉತ್ತಮ ಕಲಿಕೆ ಮತ್ತು ಬೋಧನೆಯಿಂದ ಶಿಕ್ಷಣ ಸಂಸ್ಥೆಗಳನ್ನು ವಿದ್ಯಾರ್ಥಿ ಕೇಂದ್ರಿತ ತಾಣಗಳನ್ನಾಗಿ ರೂಪಿಸಬೇಕು. ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ತುಂಬಾ ಮುಂದೆ ಸಾಗಿದೆ. ಆದರೆ ಇತರೆ ಅನೇಕ ಶಿಕ್ಷಣ ಸಂಸ್ಥೆಗಳು ಈ ವಿಷಯದಲ್ಲಿ ಹಿಂದೆ ಬಿದ್ದಿವೆ ಎಂದರು. ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವಲ್ಲಿ ಸುತ್ತೂರು ಮಠ ಮಹತ್ವದ ಕಾಣಿಕೆ ನೀಡಿದೆ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿರುವ ಅಸಮಾನತೆಯನ್ನು ತೊಡೆದುಹಾಕಲು ನಿರ್ಣಾಯಕ ಪಾತ್ರ ವಹಿಸಿದೆ. ವೈದ್ಯಕೀಯ, ತಾಂತ್ರಿಕ, ಆಯುರ್ವೇದ, ವಿಜ್ಞಾನ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಮಠವು ಜಾಗತಿಕ ಗುಣಮಟ್ಟದ ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ. ಮುಖ್ಯವಾಗಿ ಸಂಶೋಧನಾ ಕ್ಷೇತ್ರದಲ್ಲಿಯೂ ಮಠದ ವಿದ್ಯಾರ್ಥಿಗಳು ಅನುಪಮ ಸಾಧನೆ ಮಾಡಿದ್ದಾರೆಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು. ಸುತ್ತೂರು ಮಠದ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಬೋಧನೆಯಲ್ಲಿ ಮಾಡಿರುವ ಸಾಧನೆಯನ್ನು ಇತರೆ ಶಿಕ್ಷಣ ಸಂಸ್ಥೆಗಳು ಅನುಸರಿಸಬೇಕು ಎಂದು ಸಲಹೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ಮಠವು ರಾಜ್ಯಾದ್ಯಂತ ಮತ್ತಷ್ಟು ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಬೇಕು. ಅದಕ್ಕೆ ಅಗತ್ಯವಾದ ಎಲ್ಲಾ ಸಹಕಾರವನ್ನು ನೀಡಲು ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಹಾಗೂ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು. : – – – --