ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ… ಮೈಸೂರು,ಸೆಪ್ಟಂಬರ್,22,2020(..):ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಪದ್ಧತಿ ರದ್ದು, ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಕುರಿತು ಮಾತನಾಡಿದ ಗುತ್ತಿಗೆ ಹಾಗೂ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೇಶ್, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೇ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈಗಾಗಲೇ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಜತೆಗೆ ಸರ್ಕಾರಕ್ಕೆ ಹಲವು ಬಾರಿ ಪ್ರತಿಭಟನೆ ಕುರಿತು ಮಾಹಿತಿ ನೀಡಿದ್ದರೂ ಸರ್ಕಾರ ನೌಕರರ ಬೇಡಿಕೆಗಳ ಈಡೇರಿಕೆಗೆ ಮನಸ್ಸು ಮಾಡಿಲ್ಲ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು. ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಪದ್ಧತಿ ರದ್ದು, ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸುದ್ದಿಗೋಷ್ಠಿಯಲ್ಲಿ ರಾಜೇಶ್ ಆಗ್ರಹಿಸಿದರು. ಮುಷ್ಕರದ ಭಾಗವಾಗಿ ಇಂದು ಕೋವಿಡ್ 19 ವರದಿಯನ್ನು ನೀಡದೇ ಇರಲು ನೌಕರರು ನಿರ್ಧರಿಸಿದ್ದಾರೆ. : –- - - – – - - -