ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ ಅಪೇಕ್ಷೆ: ಇಂದು ಅಥವಾ ನಾಳೆ ತೀರ್ಮಾನ ಹೇಳುವ ಸಾಧ್ಯತೆ- ಸಿಎಂ ಬಿಎಸ್ ಯಡಿಯೂರಪ್ಪ… ನವದೆಹಲಿ,ಸೆಪ್ಟಂಬರ್19,2020(..):ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸಿದ್ದೇನೆ. ಇಂದು ಅಥವಾ ನಾಳೆ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಹೇಳುವ ಸಾಧ್ಯತೆ ಇದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸಿದ್ದೇನೆ. ಅವರು ಪ್ರಧಾನಿ ಮೋದಿ ಅವರ ಜತೆ ಚರ್ಚಿಸಲಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಇಂದು ಸಲಹೆ ನೀಡಲಿದ್ದಾರೆ. ಪಕ್ಷದ ವರಿಷ್ಠರು ಏನು ಸಲಹೆ ಕೊಡ್ತಾರೆ ನೋಡೋಣ. ಇಂದು ಅಥವಾ ನಾಳೆ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಹೇಳುವ ಸಾಧ್ಯತೆ ಇದೆ ಎಂದರು. ಜೆ.ಪಿ ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಅಂಶವನ್ನು ಬಹಿರಂಗಪಡಿಸಿದ ಮುಖ್ಯಮಂತ್ರಿಯವರು ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು. ದೆಹಲಿ ಭೇಟಿ ಅತ್ಯಂತ ಯಶಸ್ವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು. ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡಾ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು. : - - – -