ಕೇಂದ್ರ ಸರ್ಕಾರದ ‘ಹಿಂದಿ ದಿವಸ್’ ಗೆ ವಿರೋಧ: ಸರಣಿ ಟ್ವೀಟ್ ಮಾಡಿ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಸೆಪ್ಟಂಬರ್,14,2020(..):ಕೇಂದ್ರ ಸರ್ಕಾರದ ಹಿಂದಿ ದಿವಸ್ ಗೆ ವಿರೋಧ ವ್ಯಕ್ತಪಡಿಸಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಕಿಡಿಕಾರಿದ್ದಾರೆ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿಕೆ, ಹಿಂದಿ ದಿವಸ್ ನ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಕಿಡಿಕಾರಿದ್ದಾರೆ. ಹಾಗೆಯೇ ಮತ್ತೊಂದು ಟ್ವಿಟ್ಟರ್ ನಲ್ಲಿ, ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದಿದ್ದಾರೆ. ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದು ಹೆಚ್.ಡಿಕೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. : – ’- - - – .