ಕೋವಿಡ್ ಲಕ್ಷಣ ರಹಿತ ರೋಗಿಗಳಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆ ಕೊಡಿಸಿ-ಸಚಿವ ರಮೇಶ್ ಜಾರಕಿಹೊಳಿ ಸೂಚನೆ ಬೆಳಗಾವಿ,ಆಗಸ್ಟ್,26,2020(..):ಕೋವಿಡ್ ಲಕ್ಷಣ ರಹಿತ ರೋಗಿಗಳಿಗೆ ಅವರವರ ಮನೆಗಳಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಕೊಡಿಸುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋಕಾಕ್ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಇಂದು ನಡೆದ ಕೋವಿಡ್ 19 ಟಾಸ್ಕ್ ಫೋರ್ಸ್ ನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಧೈರ್ಯ ಹೇಳುವ ಕಾರ್ಯ ಮಾಡಬೇಕು. ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು.‌ ಅಧಿಕಾರಿಗಳು ಜನರ ಆರೋಗ್ಯದ ಸ್ಥಿತಿಗತಿ ಕುರಿತಂತೆ ಪ್ರತಿದಿನ ವರದಿ ಮಾಡಬೇಕೆಂದು ಸೂಚಿಸಿದರು. ಪ್ರಗತಿ ಪರಿಶೀಲನಾ ಸಭೆ ಗೋಕಾಕ್ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ನೆರೆ ಪರಿಹಾರ ಕುರಿತಂತೆ ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ, ವಿಪತ್ತು ಪರಿಹಾರ ನೀಡುವ ಕುರಿತಂತೆ ಮಾತುಕತೆ ನಡೆಸಲಿದ್ದಾರೆ ಎಂದರು. ರೈತರಿಗೆ ರಸಗೊಬ್ಬರನ್ನು ಒದಗಿಸುವಲ್ಲಿ ಉದ್ದೇಶಪೂರ್ವಕವಾಗಿ ಯಾರಾದರೂ ವಿಳಂಬ ಮಾಡಿದರೆ ಅಂಥಹವರ ಮೇಲೆ‌ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೋಕಾಕ್ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. : –- – - -