ಸೈಕಲ್ ಮೇಲೆ ಶವ ಸಾಗಿಸಿದ ಅಮಾನವೀಯ ಘಟನೆ : ಜಿಲ್ಲಾಧಿಕಾರಿ ಮತ್ತು ಜಿಲ್ಲಾ‌ ಆರೋಗ್ಯಾಧಿಕಾರಿಗೆ ಎಚ್ಚರಿಕೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ… ಬೆಳಗಾವಿ,ಆ,17,2020(..): ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತವ್ಯಕ್ತಿಯೊಬ್ಬರ ಶವವನ್ನ ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿದ ಅಮಾನವೀಯ ಘಟನೆ ಕುರಿತು ಪ್ರತಿಕ್ರಿಯಿಸಿರುವ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌, ಇಂತಹ ಘಟನೆಗಳು ಮುಂದೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಮಹಾಮಾರಿ ಕೊರೋನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಮಾಧ್ಯಮಗಳ ವರದಿ ಗಳನ್ನು ಗಮನಿಸಿ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಗಳೊಂದಿಗೆ ಮಾತನಾಡಿದ್ದೇನೆ. ಇಂತಹಾ ಅಮಾನವೀಯ ಘಟಕಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಅಂತ್ಯಕ್ರಿಯೆ ನಡೆಸಲು ಏನಾದರೂ ತೊಂದರೆಗಳು ಆದ ಸಂದರ್ಭದಲ್ಲಿ ಅದಕ್ಕಾಗಿಯೇ ಒಂದು ದೂರವಾಣಿ ಸಂಖ್ಯೆ ರೂಪಿಸಿ ಅದಕ್ಕಾಗಿ ಅಧಿಕಾರಿಯೊಬ್ಬರನ್ನು ನಿಯೋಜಿಸಲು ಆದೇಶಿಸಿದ್ದೇನೆ. ಮಂದಿನ‌ ದಿನಗಳಲ್ಲಿ ಈ ರೀತಿಯ ಅಮಾನವೀಯ ಘಟನೆ ನಡೆದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾ‌ ಆರೋಗ್ಯಾಧಿಕಾರಿಗೆ ಎಚ್ಚರಿಕೆ ನೀಡಿದ್ದೇ‌ನೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. : –- – -