ಗೃಹ ಸಚಿವರ ಬಗ್ಗೆ ಏಕವಚನ ಬಳಕೆ: ವಿಷಾದ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್… ಬೆಂಗಳೂರು, ಆ.15,2020(..): ನಗರದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಸವರಾಜ ಬೊಮ್ಮಾಯಿ ಅವರ ಬಗ್ಗೆ, ಅವರು ಅಲಂಕರಿಸಿರುವ ಗೃಹ ಸಚಿವ ಸ್ಥಾನದ ಬಗ್ಗೆ ತಮಗೆ ಗೌರವವಿದೆ. ಉದ್ದೇಶಪೂರ್ವಕವಾಗಿ ತಾವು ಏಕವಚನ ಬಳಸಲಿಲ್ಲ. ಮಾತಿನ ವೇಗದಲ್ಲಿ ಪ್ರಮಾದವಶಾತ್ ಪ್ರಯೋಗವಾಗಿದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ನಮ್ಮ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಈ ಗಲಭೆಯಿಂದ ತೊಂದರೆಗೆ ಒಳಗಾಗಿದ್ದಾರೆ. ಈ ಗಲಭೆಗೆ ಕಾಂಗ್ರೆಸ್‌ನವರ ಆಂತರಿಕ ಭಿನ್ನಾಭಿಪ್ರಾಯ ಕಾರಣ ಎಂದು ಬಸವರಾಜ ಬೊಮ್ಮಾಯಿ ಆರೋಪಿಸುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಎನ್ನಲು ಅವರು ಯಾರು? ಅಥಾರಿಟಿನಾ? ಸಬ್ ಇನ್‌ಸ್ಪೆಕ್ಟರಾ? ಆಯೋಗನಾ? ಎಂದು ಹೇಳುವ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರು. : - - - - -. .