ಸೂಕ್ತ ಭದ್ರತೆ ನೀಡುವಂತೆ ಮನವಿ: ನಾನು ಹುಟ್ಟಿ ಬೆಳೆದ ಮನೆ ಸುಟ್ಟು‌ ಹಾಕಿದ್ದಾರೆ ಎಂದು ಭಾವುಕರಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ… ಬೆಂಗಳೂರು,ಆ,12,2020(..): ಡಿಜೆ ಹಳ್ಳಿ ಮತ್ತು ಕೆ.ಜಿಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು. ನಮಗೆ ಸೂಕ್ತ ಭದ್ರತೆ ನೀಡಿ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸರ್ಕಾರಕ್ಕೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ. ಘಟನೆಯ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನವೀನ್ ನನ್ನ ಅಕ್ಕನ ಮಗ. ಅವನಿಗೂ ನಮಗೂ ಯಾವುದೇ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು. ನಮ್ಮ ಮನೆ ಮೇಲೆ ಸುಮಾರು ನಾಲ್ಕು ಸಾವಿರ ಜನ ದಾಳಿ ಮಾಡಿದ್ದಾರೆ. ಮಾರಕಾಸ್ತ್ರ ಪೆಟ್ರೋಲ್ ‌ಬಾಂಬ್ ಬಳಸಿ ಮನೆಗೆ ಬೆಂಕಿ ಹಚ್ಚುವ ಕೃತ್ಯ ಮಾಡಿದ್ದಾರೆ. ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ನಾನು ಹುಟ್ಟಿ ಬೆಳೆದ ಮನೆ ಸುಟ್ಟು‌ ಹಾಕಿದ್ದಾರೆ ಎಂದು ಭಾವುಕರಾಗಿ ನುಡಿದರು. ಕಳೆದ 25 ವರ್ಷದಿಂದ ಇಂತಹ ಘಟನೆ ನಡೆದಿರಲಿಲ್ಲ. ಇದರ ಹಿಂದೆ ಯಾರೇ ಇದ್ದಾರೋ ಅವರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ನಮ್ಮ ಮನೆಯಲ್ಲಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ನನಗೆ ನನ್ನ ಕುಟುಂಬಕ್ಕೆ ಅಪಾಯವಿದೆ. ಹೀಗಾಗಿ ಸಿಎಂ ಮತ್ತು ಗೃಹಸಚಿವರು ಸೂಕ್ತ ರಕ್ಷಣೆ ನೀಡಬೇಕು. ಸಚಿವ ಅಶೋಕ್ ಮನೆಗೆ ಬಂದು ನಮಗೆ ಧೈರ್ಯ ಹೇಳಿದ್ದಾರೆ. ನಮಗೆ ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಿಳಿಸಿದರು. : - - – --