ಖಾಸಗೀಕರಣ ನೀತಿ ಕೈಬಿಡಿ ಇಲ್ಲವೇ ಕುರ್ಚಿ ಬಿಟ್ಟು ತೊಲಗಿ: ಆ.8 ರಿಂದ ಹೋರಾಟ ಪ್ರಾರಂಭ- ಬಡಗಲಪುರ ನಾಗೇಂದ್ರ… ಮೈಸೂರು,ಆ,7,2020(..): ಖಾಸಗೀಕರಣ ನೀತಿಗಳನ್ನು ಕೈಬಿಡಿ ಇಲ್ಲವೆ ಕುರ್ಚಿ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ‌ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ನೀತಿ ವಿರುದ್ಧ ಆಗಸ್ಟ್ 8 ರಿಂದ ಹೋರಾಟ ಪ್ರಾರಂಭ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಾಪುರ ನಾಗೇಂದ್ರ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಬಡಗಲಪುರ ನಾಗೇಂದ್ರ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ‌ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ನೀತಿ ವಿರುದ್ಧ ಆಗಸ್ಟ್ 8 ರಿಂದ ಹೋರಾಟ ಪ್ರಾರಂಭ ಮಾಡುತ್ತೇವೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಸಹಯೋಗದಲ್ಲಿ ಹೋರಾಟ ಆರಂಭವಾಗಲಿದೆ. ರೈತ ವಿರೋಧಿ ಕಾನೂನುಗಳನ್ನು ವಾಪಸ್ಸು ಪಡೆಯಿರಿ, ಖಾಸಗೀಕರಣ ನೀತಿಗಳನ್ನು ಕೈಬಿಡಿ ಇಲ್ಲವೆ ಕುರ್ಚಿ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಟ ಪ್ರಾರಂಭ ಮಾಡಲಾಗುವುದು. ಕ್ವಿಟ್ ಇಂಡಿಯಾ ಚಳವಳಿ ಘೋಷಣೆ ದಿನವಾದ ಆಗಸ್ಟ್ 8 ರಿಂದ ಹಳ್ಳಿಗಳಿಂದ ಹೋರಾಟ ಆರಂಭಿಸುತ್ತಿದ್ದೇವೆ. ಡಿ.ದೇವರಾಜ ಅರಸು ಅವರ ಹುಟ್ಟೂರು ಬೆಟ್ಟದತುಂಗ ಗ್ರಾಮದಲ್ಲಿ ನಾಮಫಲಕ ಅನಾವರಣ ಮಾಡುವ ಮೂಲಕ ಚಳವಳಿ ಪ್ರಾರಂಭವಾಗಲಿದೆ. ನಮ್ಮ ಭೂಮಿ-ನಮ್ಮ ಹಕ್ಕು ಅನ್ಯರಿಗೆ ಮಾರಾಟಕ್ಕಿಲ್ಲ ಎಂಬ ಘೋಷಣೆಯೊಂದಿಗೆ ಪ್ರತಿ ಗ್ರಾಮಗಳಲ್ಲು ನಾಮಫಲಕ ಹಾಕುತ್ತೇವೆ. ಈ ಚಳುವಳಿ ಪ್ರಾರಂಭ ಮಾಡುವ ಮೂಲಕ ಜನವಿರೋಧಿ ಪ್ರಜಾಪ್ರಭುತ್ವದ ವಿರುದ್ಧ ಹೋರಾಟಕ್ಕೆ ಕರೆ ನೀಡಲಿದ್ದೇವೆ ಎಂದು ತಿಳಿಸಿದರು. ಅತಿವೃಷ್ಠಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಳೆದ ವರ್ಷ ಉಂಟಾದ ಅತಿವೃಷ್ಠಿಯಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆ ನೋವು ಮಾಸುವ ಮುನ್ನವೇ ಮತ್ತೊಮ್ಮೆ ಅತಿವೃಷ್ಠಿ ಎದುರಾಗಿದೆ. ಆದರೆ ಪದೇ ಪದೇ ಅತಿವೃಷ್ಠಿ ಎದುರಾಗುತ್ತಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಇನ್ನೊಂದೆಡೆ ಕೊಡಗಿನಲ್ಲಿ ಪ್ರತಿ ಬಾರಿಯೂ ಭೂ ಕುಸಿತ ಹೆಚ್ಚಾಗುತ್ತಿದೆ. ಈ ಸಂಬಂಧ ಪರಿಣಿತರ ಸಮಿತಿಯೊಂದು ಅಧ್ಯಯನ ನಡೆಸಿ ಭೂ ಕುಸಿತ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದೆ ಆದರೆ ಸರ್ಕಾರ ಅದರ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಅದರ ಪರಿಣಾಮವಾಗಿ ಈ ಬಾರಿಯೂ ಸಮಸ್ಯೆ ಎದುರಾಗಿದೆ ಎಂದು ಸರ್ಕಾರದ ವಿರುದ್ದ ಬಡಗಲಪುರ ನಾಗೇಂದ್ರ ಕಿಡಿಕಾರಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು. ಆದಷ್ಟು ಬೇಗ ಕೇಂದ್ರ ನಿಯೋಗ ರಾಜ್ಯಕ್ಕೆ ಬಂದು ಅಧ್ಯಯನ ನಡೆಸಬೇಕು. ಬಿಜೆಪಿಯ ಎಲ್ಲಾ ಸಂಸದರು ಪ್ರಧಾನ ಮಂತ್ರಿ ಮತ್ತು ಆರ್ಥಿಕ ಮಂತ್ರಿಯನ್ನು ಭೇಟಿ ಮಾಡಿ ಪರಿಹಾರ ಕೇಳಬೇಕು. ಒಂದು ವೇಳೆ ನಿಮಗೆ ಪರಿಹಾರ ಕೇಳಲು ಶಕ್ತಿ ಇಲ್ಲದಿದ್ದರೆ ನಮ್ಮನ್ನು ಕರೆದುಕೊಂಡು ಹೋಗಿ, ನಾವು ನಿಮಗೆ ಶಕ್ತಿ ತುಂಬುತ್ತೇವೆ ಎಂದು ಬಡಗಲಪುರ ನಾಗೇಂದ್ರ ಹೇಳಿದರು. ಇದೇ ವೇಳೆ ನಮ್ಮ ಭೂಮಿ ನಮ್ಮ ಹಕ್ಕು ಅನ್ಯರಿಗೆ ಮಾರಾಟಕಿಲ್ಲ ನಾಮಫಲಕ ಬಿಡುಗಡೆ ಮಾಡಲಾಯಿತು. : - – –- - -