ಕೋವಿಡ್ ನಿರ್ವಹಣೆ ಮುಖ್ಯಮಂತ್ರಿಗಳ ಮಾರ್ಗದರ್ಶನ- ಸಚಿವ ಎಸ್ ಟಿ ಸೋಮಶೇಖರ್ ಬೀದರ್,ಜೂ,27,2020(..): ಕೊರೋನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ 24×7 ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಅಗತ್ಯ ಮಾಹಿತಿಯನ್ನು ಪಡೆದು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು. ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳು ಸ್ಥಳೀಯ ಪರಿಸ್ಥಿತಿಯನ್ನು ನೋಡಿಕೊಂಡು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಈಗಾಗಲೇ ಸೂಚನೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಮಾಡುವ ಬಗ್ಗೆ ಮಾನ್ಯ ಪ್ರಧಾನಮಂತ್ರಿಗಳ ಕಚೇರಿಯಿಂದಲೂ ಸಹ ಮೇಲುಸ್ತುವಾರಿಯನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಜನತೆ ಸಹ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾಗುತ್ತದೆ ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದರು. ಈಗಾಗಲೇ 21 ಜಿಲ್ಲೆಗಳಿಗೆ ಭೇಟಿ ನೀಡಿದ್ದು, 42 ಸಾವಿರ ಆಶಾಕಾರ್ಯಕರ್ತೆಯರಲ್ಲಿ ಪ್ರಸ್ತುತ 17,500 ಮಂದಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ವಿತರಣೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಆಶಾ ಕಾರ್ಯಕರ್ತೆಯರಿಗೂ ಪ್ರೋತ್ಸಾಹಧನ ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. : – – - –