ಚಾಮುಂಡಿ ಬೆಟ್ಟದದಲ್ಲಿ ಲಕ್ಷ ವೃಕ್ಷ ನೆಡುವ ಅಭಿಯಾನ: ಅರಣ್ಯ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಸಭೆ… ಮೈಸೂರು,ಜೂ,16,2020(..): ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಸಿ ನೆಡುವ ವಿಚಾರ ಕುರಿತು ಇಂದು ಅರಣ್ಯ ಸಚಿವ ಆನಂದ್ ಸಿಂಗ್ ಸಭೆ ನಡೆಸಿ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಅರಣ್ಯ ಸಚಿವ ಆನಂದ್ ಸಿಂಗ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಎಲ್.ನಾಗೇಂದ್ರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಮೈಸೂರಿನಲ್ಲಿ 1ಲಕ್ಷಕ್ಕೂ ಅಧಿಕ ಸಸಿ ನೆಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದ್ದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಗೂ ಮುನ್ನ ಮಾತನಾಡಿದ ಅರಣ್ಯ ಸಚಿವ ಅನಂದ್ ಸಿಂಗ್ , ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಲಕ್ಷ ವೃಕ್ಷ ನೆಡುವ ಅಭಿಯಾನ ಕುರಿತು ಚರ್ಚಿಸಲಾಗುತ್ತದೆ. ಹಸಿರೀಕರಣ ಮಾಡಲು ನೂತನ ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಇಂದು ಸಭೆ ಕರೆಯಲಾಗಿದೆ. ಗಿಡ ನೆಡುವ ಜೊತೆಗೆ ನಿರ್ವಹಣೆಗೆ ಮಹತ್ವ ನೀಡಲಾಗಿದೆ. ರಾಜ್ಯಾದ್ಯಂತ ಈ ಯೋಜನೆ ರೂಪಿಸಲಾಗಿದ್ದು, ಮೈಸೂರಿನಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಹಾಗೆಯೇ ಕಾಡಂಚಿನ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಚಿಂತನೆ ನಡೆದಿದೆ. ಈ ಬಗ್ಗೆ ಈಗಾಗಲೇ ಮಹತ್ವದ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದರು. : - –- - - – - .