ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ- ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…. ಹುಬ್ಬಳ್ಳಿ,ಫೆ,3,2020(..): ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಇಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ್ ಹೆಗಡೆ ಸಂಸದ ಆಗುತ್ತಿದ್ದರಾ? ಸಂವಿಧಾನ ಬಂದ ಮೇಲೆಯೇ ಎಲ್ಲರಿಗೂ ಮತ ಹಾಕುವ ಹಕ್ಕು ಸಿಕ್ಕಿದ್ದು. ಸಂವಿಧಾನ ಓದದೆ ಇವರೆಲ್ಲ ಸಂಸದ ಯಾಕೆ ಆಗ್ತಾರೋ ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಅನಂತ್ ಕುಮಾರ್ ಹೆಗಡೆ ನಾಚಿಕೆ, ಮಾನ- ಮರ್ಯಾದೆ ಇಲ್ಲದವರು. ಸ್ವಾತಂತ್ರ ಹೋರಾಟಗಾರರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದರೂ ಅವರ ವಿರುದ್ದ ಕ್ರಮ ಜರುಗಿಸಿಲ್ಲ. ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದರೂ ಕೇಂದ್ರದ ಮಂತ್ರಿಯಾಗಿದ್ದರು. ಸ್ವತಂತ್ರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತಾನಾಡೋದು ಸರಿಯಲ್ಲ. ಸ್ವಾತಂತ್ರ್ಯ ಹೋರಾಟಗಾರರು ಜೈಲಲ್ಲಿದ್ದು, ಪ್ರಾಣ ಕಳೆದುಕೊಂಡು, ಕುಟುಂಬ ತ್ಯಜಿಸಿ ನಮಗೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದು ಹೇಳಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಸಂಪುಟ ವಿಸ್ತರಣೆ ಒಂದು ಪ್ರಹಸನವಾಗಿದೆ. ಪಕ್ಷಾಂತರ ಮಾಡಿ ಪಕ್ಷ ದ್ರೋಹವೆಸಗಿರುವವರಿಗೆ ಮಂತ್ರಿ ಸ್ಥಾನ ನೀಡಬಾರದು. ಗೆದ್ದ ಅರ್ಹರನ್ನ ಮಂತ್ರಿ ಮಾಡಬಾರದು ಎಂದು ಆಗ್ರಹಿಸಿದರು. : – - –- - .