ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್: ಅಮಿತ್ ಶಾ ಭೇಟಿ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದೇನು ಗೊತ್ತೆ….? ನವದೆಹಲಿ,ಜ,31,2020(..): ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವ ಅಮಿತ್ ಶಾ ಚರ್ಚಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಅಂದುಕೊಂಡಂತೆ ಎಲ್ಲವೂ ಆಗಿದೆ. ನಾವು ನೀಡಿದ ಪಟ್ಟಿಗೆ ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಇಂದು ನವದೆಹಲಿಯ ಸಂಸತ್ ಭವನದಲ್ಲಿ ಅಮಿತ್ ಶಾ ಜತೆ 20 ನಿಮಿಷ ಚರ್ಚಿಸಿ ಹೊರಬಂದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ, ಜೆಪಿ ನಡ್ಡಾ ಅವರ ಜತೆ 25 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ನಾನು ಅಂದಿಕೊಂಡಂತೆ ಎಲ್ಲವೂ ಆಗಿದೆ. ನಾವು ಕೊಟ್ಟಿದ್ದ ಲೀಸ್ಟ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಕೆಲವರ ಮನವೊಲಿಕೆ ಮಾಡಬೇಕಿದೆ. ಬೆಂಗಳೂರಿಗೆ ಹೋಗಿ ಚರ್ಚೆ ಮಾಡಿ ನಿರ್ಧರಿಸುತ್ತೇನೆ ಎಂದರು. ಯಾವಾಗ ಬೇಕಾದರೂ ಸಂಪುಟ ವಿಸ್ತರಿಸಿ ಎಂದಿದ್ದಾರೆ. ನಾನೇ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡುವೆ. ಮೂರು ದಿನದಲ್ಲಿ ಯಾವಾಗ ಬೇಕಾದ್ರೂ ಸಂಪುಟ ವಿಸ್ತರಣೆ ಮಾಡ್ತೀನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಹೊಸ ಡಿಸಿಎಂ ಹುದ್ದೆ ಸೃಷ್ಠಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಸದ್ಯ ಹೊಸ ಡಿಸಿಎಂ ಸೃಷ್ಠಿ ಇಲ್ಲ. ಈಗಿರುವ ಮೂವರು ಡಿಸಿಎಂ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟನೆ ನೀಡಿದರು. 13 ಮಂದಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದ್ದು, ಸೋಮವಾರ ಅಥವಾ ಮಂಗಳವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. : - -