ಸಿಎಎ ಮತ್ತು ಎನ್ ಆರ್ ಸಿ ವಿಚಾರ ಮುಂದಿಟ್ಟುಕೊಂಡು ಕೇಂದ್ರದಿಂದ ಕೋಮು ಭಾವನೆ ಕದಡುವ ಕೆಲಸ-ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಿಡಿ…. ಮೈಸೂರು,ಜ,6,2020(..): ಕೇಂದ್ರದ ಬಿಜೆಪಿ ಸರ್ಕಾರ ಸಿಎಎ ಮತ್ತು ಎನ್.ಆರ್.ಸಿ ವಿಚಾರಗಳನ್ನು ಮುಂದಿಟ್ಟುಕೊಂಡು ಕೋಮು ಭಾವನೆ ಕದಡುವ ಕೆಲಸವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಿಡಿಕಾರಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಅಲ್ಪಸಂಖ್ಯಾತರಿಗೆ ಬೆದರಿಕೆಯೊಡ್ಡಲಾಗುತ್ತಿದೆ. ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಕೂಡ ಅಲ್ಪ ಸಂಖ್ಯಾತರಿಗೆ ಬೆಸರಿಸುವ ರೀತಿ ಹೇಳಿಕೆ ನೀಡಿರುವುದು ಖಂಡನೀಯ. ನವದೆಹಲಿಯ ಜೆ.ಎನ್.ಯು ನಲ್ಲಿ ಕಳೆದ ರಾತ್ರಿ ನಡೆದಿರುವ ದಾಳಿ ಘಟನೆ ಖಂಡನಾರ್ಹವಾದುದು ಎಂದರು. ಇದೇ ವೇಳೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮಾತನಾಡಿ, ಸಿಎಎ ಮತ್ತು ಎನ್.ಆರ್.ಸಿ ವಿಚಾರಕ್ಕೆ ಸಂಬಂಧಿಸಿದಂತೆ ಜನರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ಬಿಜೆಪಿ ನಿರತವಾಗಿದೆ. ಎರಡು ಕಾಯ್ದೆಗಳ ಜಾರಿಯಿಂದ ಎದುರಾಗುವ ತೊಂದರೆಗಳ ಬಗ್ಗೆ ಕಾಂಗ್ರೆಸ್ ಪಕ್ಷ ಕೂಡ ಜನರಿಗೆ ಮನವರಿಕೆ ಮಾಡಿಕೊಡಲಿದೆ. ದೇಶದಲ್ಲಿರುವ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಸಿಎಎ ಹಾಗು ಎನ್.ಆರ್.ಸಿ ಕಾಯ್ದೆ ಜಾರಿಗೊಳಿಸುವ ತಂತ್ರವನ್ನು ಬಿಜೆಪಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಹಾಗೆಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರೆ ಮಂಜುಳ ಮಾನಸ, ಜನಜಾಗೃತಿ ಅಭಿಯಾನದ ಹೆಸರಿನಲ್ಲಿ ಬಿಜೆಪಿಯವರು ಮನೆ ಮನೆಗೆ ತೆರಳಿ ಕರಪತ್ರ ಹಂಚುತ್ತಿರುವುದು ದೋಖಾ ಆಗಿದೆ. ಸರ್ಕಾರದ ತಪ್ಪುಗಳ ಬಗ್ಗೆ ಪ್ರಶ್ನೆ ಮಾಡುವವರಿಗೆ ದೇಶ ದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಶಾಸಕ ಸೋಮಶೇಖರ್ ರೆಡ್ಡಿಯವರಂತಹವರ ಮೂಲಕ ಬಿಜೆಪಿ ಮಾಡಿಸುತ್ತಿದೆ ಎಂದು ಆರೋಪಿಸಿದರು. : – – - – --