ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸುವುದೇ ನನ್ನ ಟಾರ್ಗೆಟ್: ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು, ನವೆಂಬರ್ 17, 2019 (..): ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸುವುದೇ ನನ್ನ ಟಾರ್ಗೆಟ್. ಅವರನ್ನು ಅನರ್ಹಗೊಳಿಸುವಂತೆ ಮಾಡಿದ್ದೇ ನಾನು. ಹಾಗಾಗಿ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಹಲವು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಉಳಿದವರು ನಾಳೆ ತಮ್ಮ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.15 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುತ್ತೇನೆಂದು ಹೇಳುತ್ತಿರುವ ಎಚ್. ವಿಶ್ವನಾಥ್ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ.ಇದು ಕೇವಲ ಗಿಮಿಕ್ ಆಗಿದೆ. ಇಷ್ಟು ವರ್ಷ ಏಕೆ ಈ ಮಾತು ಹೇಳಿರಲಿಲ್ಲ. ಇಷ್ಟು ವರ್ಷ ಕಾಲ ಏಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಲ್ಲ.ಈಗ ಏಕೆ ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ? ಇದು ಕೇವಲ ಚುನಾವಣಾ ಗಿಮಿಕ್ ಆಗಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದರು. ಶಿವಸೇನೆ ಎನ್.ಡಿ.ಎ ಯಿಂದ ಹೊರ ಬಂದಿದೆ. ಹಾಗಾಗಿ ಶಿವಸೇನೆ ಈಗ ಕೋಮುವಾದಿಯಲ್ಲ. ಶಿವಸೇನೆ ಅಧಿಕೃತವಾಗಿ ಎನ್.ಡಿ.ಎ ಯಿಂದ ಹೊರಬಂದಿದೆ. ಕೋಮುವಾದದಿಂದ ದೂರ ಉಳಿಯುವುದಾಗಿ ಹೇಳಿದೆ. ಹಾಗಾಗಿ ಎನ್.ಸಿ.ಪಿ ಕಾಂಗ್ರೆಸ್ ಇದೀಗ ಶಿವಸೇನೆ ಜೊತೆ ಕೈ ಜೋಡಿಸಲು ಮುಂದಾಗಿವೆ. ಮುಂದೇನಾದರೂ ಶಿವಸೇನೆ ಮತ್ತೆ ಕೋಮುವಾದ ಪ್ರತಪಾದಿಸಿದರೆ ಅದರಿಂದ ದೂರಾಗುತ್ತೇವೆ ಎಂದು ಮಾಜಿ ಸಿಎಂ ಹೇಳಿದರು.