ಟಿಕೆಟ್ ಕೊಡದಿದ್ರೆ ನಾನು ನನ್ನ ದಾರಿ ನೋಡಿಕೊಳ್ತೇನೆ ಎಂದ ಬಿಜೆಪಿ ಹಿರಿಯ ಮುಖಂಡ ರಾಜುಕಾಗೆ… ಬೆಳಗಾವಿ,ಅ,28,2019(..): ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ನನಗೆ ಟಿಕೆಟ್ ಕೊಡಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾನು ನನ್ನ ದಾರಿ ನೋಡಿಕೊಳ್ತೇನೆ ಎಂದು ಬಿಜೆಪಿ ಹಿರಿಯ ಮುಖಂಡ ರಾಜು ಕಾಗೆ ಎಚ್ಚರಿಕೆ ನೀಡಿದ್ದಾರೆ. ಅಥಣಿ ಮತ್ತು ಕಾಗವಾಡ ಎರಡು ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ, ಸುಪ್ರೀಂಕೋರ್ಟ್ ಅನರ್ಹ ಶಾಸಕರ ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ರಾಜುಕಾಗೆ, ಯಡಿಯೂರಪ್ಪನವರು ನನಗೆ ಟಿಕೆಟ್ ಕೊಡೊದಿಲ್ಲ ಅಂತ ನೇರವಾಗಿ ಹೇಳಿದ್ದಾರೆ, ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಕೊಡಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನನ್ನ ದಾರಿ ನೋಡಿಕೊಳ್ತೇನೆ. ಕಾಂಗ್ರೆಸ್ ನಾಯಕರು ಸಹ ನನ್ನ ಜತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ, ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ ಎಂದಿದ್ದಾರೆ. ಕೋರ್ಟ್ ಕೇಸ್ ಅನರ್ಹರ ಪರವಾಗಿ ಬಂದರೆ ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ, ಅವರ ವಿರೋಧವಾಗಿ ಬಂದರೆ ನಾನು ಕಾಗವಾಡದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ರಾಜು ಕಾಗೆ ತಿಳಿಸಿದ್ದಾರೆ. ಲಕ್ಷ್ಮಣ ಸವದಿಯವರು ನಿಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ, ನನ್ನ ಸ್ವಂತ ಸಹೋದರನೇ ನನ್ನ ವಿರುದ್ಧ ಒಂದು ಬಾರಿ ಚುಣಾವಣೆಯಲ್ಲಿ ಕೆಲಸ ಮಾಡಿದ್ದ, ಹೀಗಾಗಿ ರಾಜಕಾರಣದಲ್ಲಿ ಯಾವುದೇ ಸಂಬಂಧ ಲೆಕ್ಕಕ್ಕೆ ಬರೋದಿಲ್ಲ, ಶ್ರೀಮಂತ ಪಾಟೀಲ್ ಅನರ್ಹರಾದರೆ ಕಾಗವಾಡದಲ್ಲಿ ಚುಣಾವಣೆಗೆ ನಿಲ್ಲುತ್ತೆನೆ, ಅವರ ಪರವಾಗಿ ಕೋರ್ಟ್ ಆದೇಶ ನೀಡಿದ್ದಾದರೆ ನಾನು ಅಥಣಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದರು. : - - -- -