ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಷರತ್ತು ಬದ್ಧ ಜಾಮೀನು ಮಂಜೂರು… ನವದೆಹಲಿ,ಅ,23,2019(..): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 49 ದಿನಗಳಿಂದ ಜೈಲುವಾಸ ಅನುಭವಿಸಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ ಶಿವಕುಮಾರ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್ ಆದೇಶಿಸಿದೆ. ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಅನಾರೋಗ್ಯ ಕಾರಣ ನೀಡಿ ದೆಹಲಿ ಹೈಕೋರ್ಟ್ ಡಿ.ಕೆ ಶಿವಕುಮಾರ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕಳೆದ 49 ದಿನಗಳಿಂದ ತಿಹಾರ ಜೈಲಿನಲ್ಲಿದ್ದ ಡಿ.ಕೆ ಶಿವಕುಮಾರ್ ಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಜಾಮೀನು ಮಂಜೂರು ಮಾಡಿರುವ ಕೋರ್ಟ್, 25ಲಕ್ಷ ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು. ಕೋರ್ಟ್ ಅನುಮತಿ ಇಲ್ಲದೆ ವಿದೇಶಿ ಪ್ರಯಾಣ ಕೈಗೊಳ್ಳುವಂತಿಲ್ಲ, ಪಾಸ್‍ಪೋರ್ಟ್‍ನ್ನು ಕೋರ್ಟ್ ಗೆ ಸರೆಂಡರ್ ಮಾಡಬೇಕು. ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿದೆ. ಇನ್ನೊಂದೆಡೆ ಡಿ.ಕೆ ಶಿವಕುಮಾರ್ ರನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ. : – - - – -