ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗೆ ಮುಂದಾಗಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ದೇವಮಾನೆ ಕರೆ.. ಮೈಸೂರು, ಅ. 4,2019(..): ವನ್ಯಜೀವಿ ಹಾಗೂ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ದೇವಮಾನೆ ಅವರು ಇಂದು ತಿಳಿಸಿದರು. 65 ನೇ ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣಾ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ನಗರದ ಅರಮನೆಯ ಬಲರಾಮ ಗೇಟ್ ಬಳಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ದೇವಮಾನೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ದಿನೇ ದಿನೇ ಅರಣ್ಯ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ನಾಡಿಗೆ ಬಂದು ಹಾವಳಿ ಮಾಡುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಸಂಪತ್ತನ್ನು ಹೆಚ್ಚಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಿದೆ. ಜೊತೆಗೆ ಪ್ರಾಣಿ ಪ್ರೀತಿ ಹೊಂದುವ ಮೂಲಕ ವನ್ಯಜೀವಿ ಸಂರಕ್ಷಣೆಗೆ ಮುಂದಾಗಬೇಕು ಎಂದು ದೇವಮಾನೆ ತಿಳಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಲೆಕ್ಸಾಂಡರ್, ಪ್ರಶಾಂತ್ ಕುಮಾರ್, ಅಜಿತ್ ಕುಲಕರ್ಣಿ, ಶ್ರೀಧರ್, ಭಾನುಪ್ರಕಾಶ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಸರಾ ಜಂಬೂಸವಾರಿ ಮೆರವಣಿಯಲ್ಲಿ ಸಾಗುವ ಆನೆಗಳೊಂದಿಗೆ ಅರಮನೆಯಿಂದ ಹೊರಟ ಜಾಗೃತಿ ಜಾಥಾವು ಕೆ.ಆರ್. ಸರ್ಕಲ್, ಆಯುರ್ವೇದ ಸರ್ಕಲ್, ಹೈವೇ ಸರ್ಕಲ್ ಮೂಲಕ ಸಾಗಿ ಬನ್ನಿ ಮಂಟಪ ತಲುಪಿತು. ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು ಅರಣ್ಯ ಇಲಾಖೆ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡರು. : - 65th - -